Read - < 1 minute
ದಾವಣಗೆರೆ, ಸೆ.16: ರಾಜ್ಯಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ಅಕ್ಟೋಬರ್ 1ರಂದು ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ, ಹಿಂದುಳಿದವರು, ಶೋಷಿತ ವರ್ಗದ ಜನರ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು , ನಿಮ್ಮ ಪಕ್ಷದ ಆತಂರಿಕ ಸಮಸ್ಯೆಯಾಗಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಸಮಸ್ಯೆಯಿಲ್ಲ. ಪಕ್ಷದ ಸಂಘಟನೆಯೊಂದಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಪ್ರತಿಪಕ್ಷಗಳ ಬೆಂಬಲವಿಲ್ಲದೆ ಸ್ವಾತಂತ್ರವಾಗಿ ಅಧಿಕಾರಕ್ಕೇರಲಿದೆ ಎಂದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಆಯ್ಕೆಯಾಗಿದ್ದು, ಒಂದು ವೇಳೆ ನಿಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ನೀವೇ ಸಿಎಂ ಆಗುವಿರಾ ಎಂದು ಕೇಳಿದ ಪ್ರಶ್ನೆಗೆ ಈ ಬಗ್ಗೆ ನಾನು ಏನು ಹೇಳಲು ಸಾಧ್ಯವಿಲ್ಲ. ಆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಹೇಳಿದರು.
ಬ್ರಿಗೇಡ್ ತಡೆಯಲು ಯತ್ನ!
ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಪ್ರಮುಖ ಕಾರಣವಾಗಿರುವ ರಾಯಣ್ಣ ಬ್ರಿಗೇಡ್ ನ ಮೊದಲ ಸಮಾವೇಶ ಇದೇ ಅ.1 ರಂದು ನಡೆಯಲಿದೆ.
ಬಿ ಎಸ್ ಯಡಿಯೂರಪ್ಪ ವಿರುದ್ಧ ಸಡ್ಡು ಹೊಡೆದಿರುವ ಈಶ್ವರಪ್ಪ ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘಟನೆಗಾಗಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ಪ್ರತ್ಯೇಕ ಹಾದಿ ತುಳಿದಿದ್ದು, ಸಮಾವೇಶ ಹಾವೇರಿಯಲ್ಲಿ ನಡೆಯಲಿದೆ.
ಇನ್ನು ಈ ಸಮಾವೇಶ ತಡೆಯುವ ಲೆಕ್ಕಾಚಾರವೂ ನಡೆದಿದೆ.
Discussion about this post