ಬೆಂಗಳೂರು, ಅ.19: ಚಳಿಗಾಲದ ವಿಧಾನಮಂಡಲದ ಅಧಿವೇಶವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ, ದಿನಾಂಕ ನಿಗದಿಪಡಿಸಲಾಗಿದೆ.
ನ.21ರಿಂದ ಡಿ.2ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸಂಪುಟಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಎಂಜಿನಿಯರ್ ಗಳ ನೇಮಕಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ ನಿಯಮಗಳಿಗೆ ಕಾನೂನು ತಿದ್ದುಪಡಿ ಮಾಡಲು ಸಂಪುಟ ಸಮ್ಮತಿಸಿದೆ. ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿ ನಾಲ್ವರು ನ್ಯಾಯಾಧೀಶರ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿ 110 ಎಕರೆ ಪ್ರದೇಶದಲ್ಲಿ ಚಿತ್ರನಗರ ನಿರ್ಮಾಣಕ್ಕೆ ಗುತ್ತಿಗೆ ಆಧಾರದಲ್ಲಿ ಜಮೀನು ನೀಡಲು ಸಂಪುಟಸಭೆ ಒಪ್ಪಿಗೆ ನೀಡಿದೆ. ಉತ್ತರಕನ್ನಡ ಜಿಲ್ಲೆ ಶಿರ್ಸಿ ತಾಲ್ಲೂಕಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಕೈಗೊಳ್ಳುವ ಸಿವಿಲ್ ಕಾಮಗಾರಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮಸಿಗೆ ಗ್ರಾಮದಲ್ಲಿ 5ಎಕರೆ ಸೊಪ್ಪಿನಬೆಟ್ಟ ಸರ್ಕಾರಿ ಜಮೀನನ್ನು ಕೆಎಸ್ಆರ್ ಟಿಸಿ ಬಸ್ ಘಟಕ ನಿರ್ಮಾಣ ಮಾಡಲು ಮಂಜೂರು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Discussion about this post