Read - < 1 minute
ನವದೆಹಲಿ, ಸೆ.15: ಕಾವೇರಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಯಾ ಸರ್ಕಾರವೇ ಶಾಂತಿ ಕಾಪಾಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಕಾವೇರಿ ಸಂಬಂಧ ತೀರ್ಪು ಹೊರಬಂದಾಗಲೆಲ್ಲಾ ಹಿಂಸಾಚಾರಗಳು, ಪ್ರತಿಭಟನೆಗಳು ನಡೆಯುತ್ತಲೇ ಇವೆ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ ಎಂದು ಉಭಯ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನ್ಯಾಯಾಲಯದ ಆದೇಶ ಹೊರಬಿದ್ದ ಬಳಿಕ ಯಾವುದೇ ಹಿಂಸಾತ್ಮಕ ಘಟನೆಗಳು ನಡೆಯಬಾರದು, ನ್ಯಾಯಾಲಯ ಘಟನತೆ ಗೌರವವನ್ನು ಎತ್ತಿಹಿಡಿಯಬೇಕು ಹಾಗೂ ಪಾಲನೆ ಮಾಡಬೇಕು, ಜನರು ಕಾನೂನು ತಮ್ಮ ಕೈಗೆತ್ತಿಕೊಳ್ಳಬಾರದೆಂದು ಸುಪ್ರೀಂಕೋರ್ಟ್ ತಿಳಿಸಿದೆ.
ತಮಿಳುನಾಡಿನ ಕನ್ಯಾಕುಮಾರಿ ಮೂಲದ ಸಾಮಾಜಿಕ ಕಾರ್ಯಕರ್ತ ಪಿ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನ್ಯಾಯಾಲಯದ ಆದೇಶವನ್ನು ಎರಡು ರಾಜ್ಯಗಳು ಪಾಲಿಸಬೇಕು. ವಿರೋಧ ವ್ಯಕ್ತಪಡಿಸಿ ಶಾಂತಿಕದಡುವ ಹೋರಾಟಗಳನ್ನು ನಡೆಸಬಾರದು ಎಂದು ಸೂಚಿಸಿದೆ.
ಕಾವೇರಿ ನೀರು ಹರಿಸುವಂತೆ ನೀಡಿರುವ ಆದೇಶ ವಿರೋಧಿಸಿ ಕರ್ನಾಟಕ ಮತ್ತು ತಮಿಳುನಾಡುಗಳಲ್ಲಿ ಹೆಚ್ಚಿರುವ ಹಿಂಸಾಚಾರ ನಿಯಂತ್ರಣಕ್ಕೆ ಸೂಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬೆಳಗ್ಗೆ ಬಂದರೂ ಈ ಪೀಠದಲ್ಲಿ ನ್ಯಾಯಮೂರ್ತಿ ಉದಯ್ ಲಲಿತ್ ಅವರು ಇರಲಿಲ್ಲ ಎಂಬ ಕಾರಣಕ್ಕಾಗಿ ಮಧ್ಯಾಹ್ನ 3.30ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಸಿ.ನಾಗಪ್ಪನ್ ಅವರನ್ನು ಒಳಗೊಂಡ ಪೀಠ ಬೆಳಗ್ಗೆ ಅರ್ಜಿ ವಿಚಾರಣೆ ನಡೆಸಿತು. ಆದರೆ, ಇದರಲ್ಲಿ ನ್ಯಾಯಮೂರ್ತಿ ಉದಯ್ ಲಲಿತ್ ಇರಬೇಕೆಂದು ಹೇಳಿ ಎರಡೂ ರಾಜ್ಯಗಳ ಜನತೆ ಶಾಂತಿ, ಸೌಹಾರ್ದತೆಯನ್ನು ಕಾಪಾಡಬೇಕು ಮತ್ತು ಕಾನೂನನ್ನು ಗೌರವಿಸಬೇಕು ಎಂದು ಹೇಳಿ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ನಂತರ ಬೆಂಗಳೂರು ಹಾಗೂ ರಾಜ್ಯದ ಇತರ ಕಡೆ ಭಾರಿ ಹಿಂಸಾಚಾರ ಘಟನೆಗಳು ನಡೆದಿದ್ದವು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ ಕಾವೇರಿ ಕಿಚ್ಚು ಇಬ್ಬರನ್ನು ಬಲಿ ಪಡೆದಿತ್ತು.
ಕಾವೇರಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ಎರಡು ರಾಜ್ಯಗಳಲ್ಲೂ ಹಿಂಸಾತ್ಮಕ ಘಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಕನ್ಯಾಕುಮಾರಿ ಮೂಲದ ಹೋರಾಗಾರರೊಬ್ಬರು ಹಿಂಸಾಚಾರದಲ್ಲಿ ಭಾಗಿಯಾದ ರಾಜ್ಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
Discussion about this post