ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗುರುಕುಲ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುರುಕುಲ ಮಾದರಿಯ ಶಿಕ್ಷಣ ಅನೇಕ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದರು.
ಸ್ಥಾವರಕ್ಕಿಂತ ಜಂಗಮದಲ್ಲಿಯೇ ದೇವರನ್ನು ಕಾಣಬಹುದೆಂದು ಶರಣರು ಪ್ರತಿಪಾದಿಸಿದ್ದಾರೆ. ಕಟ್ಟಡಕ್ಕಿಂತ ಮುಖ್ಯ ಇಲ್ಲಿನ ಶಿಕ್ಷಣ ವ್ಯವಸ್ಥೆ ಎಂದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 2 ಕೋಟಿ ರೂ. ಅನುದಾನವನ್ನು ಗುರುಕುಲಕ್ಕೆ ನೀಡಿದ್ದಾರೆ. ಇದನ್ನು ಸಕಾಲಿಕವಾಗಿ ಬಳಸಿಕೊಂಡಿರುವುದು ಶ್ಲಾಘನೀಯ ಎಂದರು.
ವಿಮಾನ ನಿಲ್ದಾಣ ಫೆ.27ರಂದು ಲೋಕಾರ್ಪಣೆಯಾಗುತ್ತಿದ್ದು, ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ. ಶರಣರ ನಾಡು ಶಿಕಾರಿಪುರದ ಉಡುತಡಿಯನ್ನು ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿ, ಅಕ್ಕಮಹಾದೇವಿ ಪ್ರತಿಮೆ ಸ್ಥಾಪನೆ, ವಿವಿಧ ಶರಣದ ಪ್ರತಿಮೆ ಸ್ಥಾಪನೆ ಮಾಡಲಾಗುತ್ತಿದ್ದು, ಇದಕ್ಕೆ ಸುಮಾರು 75 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಭಾರತೀಯ ಸಂಸ್ಕೃತಿ ಉಳಿಸುವಲ್ಲಿ ಗುರುಕುಲಗಳ ಪಾತ್ರ ಅತೀ ಮುಖ್ಯವಾಗಿದೆ. ಮಕ್ಕಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ವಾರಣಾಸಿ ಜಂಗಮವಾಡಿ ಮಠದ ಡಾ. ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪುರೋಹಿತ ಸಂಘದ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ವೀರಶೈವ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಸಮಾಜದ ಮುಖಂಡರಾದ ಎನ್.ಜೆ. ರಾಜಶೇಖರ್, ಮಹಾಲಿಂಗಯ್ಯ ಶಾಸ್ತ್ರಿ ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ಇ. ವಿಶ್ವಾಸ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















