ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈದ್ ಮಿಲಾದ್ Eid Milad ಮೆರವಣಿಗೆ ವೇಳೆ ಇಲ್ಲಿನ ರಾಗಿ ಗುಡ್ಡದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿದೆ.
ಸಾಮಾಜಿಕ ಜಾಲತಾಣಗಳ ಹಲವು ವೇದಿಕೆಗಳಲ್ಲಿ ಶಿವಮೊಗ್ಗ ಹೊತ್ತಿ ಉರಿಯುತ್ತಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ, ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸುಮಾರು 60 ಮಂದಿಯನ್ನು ಬಂಧಿಸಿ, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಘಟನೆ ನಡೆದ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಬಡಾವಣೆಯ ಒಳ ಹಾಗೂ ಹೊರ ಹೋಗುವವರ ಮಾಹಿತಿ ಕಲೆಹಾಕಲಾಗುತ್ತಿದೆ. ಗಲಭೆಗೆ ಸಂಬಂಧಿಸಿದಂತೆ 24 ದೂರುಗಳು ದಾಖಲಾಗಿದ್ದು, 60 ಜನರನ್ನು ಬಂಧಿಸಲಾಗಿದೆ.
Also read: ಶಿವಮೊಗ್ಗ ಅಹಿತಕರ ಘಟನೆ | ಸುಳ್ಳು ಸುದ್ದಿ ಹರಡಿದರೆ ಕ್ರಮ | ಎಸ್’ಪಿ ಫೈನಲ್ ವಾರ್ನಿಂಗ್
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SP MithunKumar ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವಂತೆ ಶಿವಮೊಗ್ಗದಲ್ಲಿ ಯಾವುದೇ ಧಗಧಗ, ಕೊತಕೊತ ಇಲ್ಲ ಎಂದು ಹೇಳುವ ಮೂಲಕ ತಪ್ಪು ಸಂದೇಶ ರವಾನಿಸಬೇಡಿ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಈದ್ ಮೆರವಣಿಗೆಯ ದಿನ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸುವ ಜೊತೆಯಲ್ಲಿ ನಗರದಲ್ಲಿ ಪರಿಸ್ಥಿತಿಯಲ್ಲಿ ಸಂಪೂರ್ಣ ಹತೋಟಿಯಲ್ಲಿಟ್ಟುಕೊಂಡಿದ್ದಾರೆ. ವಾಸ್ತವವಾಗಿ ರಾಗಿಗುಡ್ಡ ಪ್ರದೇಶದಲ್ಲಿ ಕೊಂಚ ಬಿಗಿ ಬಂದೋಬಸ್ತ್ ವಾತಾವರಣವಿದ್ದರೆ, ಉಳಿದಂತೆ ನಗರದಾದ್ಯಂತ ಎಲ್ಲವೂ ಎಂದಿನಂತೆ ಶಾಂತಿಯುತವಾಗಿದೆ. ಸಾರ್ವಜನಿಕ ಹಾಗೂ ವಾಹನ ಸಂಚಾರ ಎಂದಿನಂತಿದ್ದು, ನಗರದ ಬಹುತೇಕ ಕಡೆಗಳಲ್ಲಿ ವ್ಯಾಪಾರ ವಹಿವಾಟು ಸಹ ಎಂದಿನಂತೆ ಇದೆ.
ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಿ, ಯಾವುದೇ ರೀತಿಯ ದೊಡ್ಡ ಅಹಿತಕರ ಘಟನೆ ನಡೆಯದಂತೆ ತಡೆಯುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಹೀಗಾಗಿ, ನಗರದ ಪರಿಸ್ಥಿತಿ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ವದಂತಿಗಳನ್ನು ಹರಡಬೇಡಿ. ಬದಲಾಗಿ, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಎಂಬುದು ಕಲ್ಪ ಮೀಡಿಯಾ ಹೌಸ್ ಕಳಕಳಿಯ ಮನವಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post