ಕಲ್ಪ ಮೀಡಿಯಾ ಹೌಸ್ | ಮೈಸೂರು |
ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು.
Also read: ಅಂದ್ರಳ್ಳಿ ಶಾಲಾ ಪ್ರಕರಣ | ಮಕ್ಕಳಿಂದ ಶೌಚಾಲಯ ಸ್ವಚ್ಛ | ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅಮಾನತು
ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು ಎಂದರು.
ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು.
ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.
ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದರು.
ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ ಎಂದ ಅವರು ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.
ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅವರು ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
rbರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















