ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂಬರುವ ರಾಜ್ಯ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ Election of South-West Graduate Constituency of Vidhan Parishad ಕಾಂಗ್ರೆಸ್ ನಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿ ನಾನಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ ಎಂದು ಎಸ್.ಪಿ. ದಿನೇಶ್ ಹೇಳಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೈರುತ್ಯ ಪದವೀಧರ ಕ್ಷೇತ್ರದಿಂದ ನಾನು ಅಭ್ಯರ್ಥಿಯಾಗಿ 2012 ಮತ್ತು 2018ರಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದೆ. 2018ರಲ್ಲಿ ಅತ್ಯಂತ ಹೆಚ್ಚು ಮತಗಳನ್ನು ಪಡೆದಿದ್ದೆ. ಆದರೆ ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 30 ವಿಧಾನಸಭೆ ಕ್ಷೇತ್ರಗಳಿದ್ದು, ಈಗ 18 ಶಾಸಕರು ಕಾಂಗ್ರೆಸ್ ನವರೇ ಇದ್ದಾರೆ. ಹಾಗಾಗಿ ನಾನು ಗೆದ್ದೇ ಗೆಲ್ಲುವೆ ಎಂದರು.
ಕಳೆದ ಮೂರೂವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಿದ್ದೇನೆ. ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ, ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಸಿಂಡಿಕೇಟ್ ಸದಸ್ಯನಾಗಿ ವಿದ್ಯಾರ್ಥಿಗಳ ಕುಂದುಕೊರತೆ ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಈ ಎಲ್ಲಾ ಕಾರಣಗಳಿಂದ ನನಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದರು.
Also read: ಮೈಸೂರು ಜಿಲ್ಲೆಯಲ್ಲೂ ರಾಮಮಂದಿರ ನಿರ್ಮಾಣ | ಜ.22ರಂದು ಭೂಮಿ ಪೂಜೆ | ಏನಿದರ ವಿಶೇಷ?
ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ರಾಜ್ಯದ ನಾಯಕರು ಈ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇನ್ನೂ ತೀರ್ಮಾನಿಸಿಲ್ಲ. ಇದನ್ನು ಎಐಸಿಸಿಗೆ ಕಳಿಸಲಾಗಿದೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಆದರೆ, ರಾಜ್ಯದ ನಾಯಕರು ನನಗೆ ಭರವಸೆ ನೀಡಿದ್ದಾರೆ. ಕ್ಷೇತ್ರದಲ್ಲಿ ಓಡಾಡಲು ತಿಳಿಸಿದ್ದಾರೆ. ಹಾಗಾಗಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದರು.
ಈ ಬಾರಿ ಮತದಾರರ ಸಂಖ್ಯೆ ಹೆಚ್ಚಾಗಿದೆ. ಸುಮಾರು 74 ಸಾವಿರ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಎಲ್ಲಾ ಮತದಾರರನ್ನು ಪತ್ರದ ಮೂಲಕ ಭೇಟಿಯಾಗಿದ್ದೇನೆ ಮತ್ತು ಮರು ಟಪಾಲಿನ ಮೂಲಕ ಸಹಕಾರ, ಬೆಂಬಲವನ್ನು ನಿರೀಕ್ಷಿಸಿದ್ದೇನೆ ಎಂದರು.
ನಾನು ಯಾವುದೇ ಪಕ್ಷಕ್ಕೂ ವಲಸೆ ಹೋಗದೇ ಕಾಂಗ್ರೆಸ್ ಪಕ್ಷದಲ್ಲಿಯೇ ನಿಷ್ಠಾವಂತನಾಗಿ ಸೇವೆ ಸಲ್ಲಿಸಿದ್ದೇನೆ. ವಿಧಾನ ಪರಿಷತ್ ನಲ್ಲಿ ತಮ್ಮ ಧ್ವನಿಯಾಗಲು ನನಗೊಂದು ಅವಕಾಶ ಕೊಡಬೇಕು. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿದ್ದೇನೆ. ವಿದ್ಯಾರ್ಥಿ ಜೀವನದಿಂದಲೇ ಸಾಧನೆಗಳನ್ನು ಮಾಡುತ್ತಾ ಬಂದಿದ್ದು, ಎನ್.ಎಸ್.ಯು.ಐ., ಯುವ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಸಂಘಟನೆಗೆ ಶ್ರಮಿಸಿದ್ದೇನೆ. ಮೂಲ ಕಾಂಗ್ರೆಸ್ ನವರಿಗೆ ಟಿಕೆಟ್ ಕೊಡಬಹುದು ಎಂಬ ವಿಶ್ವಾಸ ನನಗಿದೆ ಎಂದರು.
ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್. ರಮೇಶ್ ಮಾತನಾಡಿ, ಎಸ್.ಪಿ. ದಿನೇಶ್ ಅವರು ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಟಿಕೆಟ್ ಸಿಗಬಹುದು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಯಶಸ್ವಿಯಾಗಿ ಆರಂಭಿಸಿದ್ದಾರೆ. ಆದರೆ, ಅಸ್ಸಾಂ ಮತ್ತು ಮಣಿಪುರದಲ್ಲಿ ಬಿಜೆಪಿ ಸರ್ಕಾರಗಳು ಅವರ ವಿರುದ್ಧ ಸುಳ್ಳು ಕೇಸ್ ಹಾಕಿ ಜಾಥಾ ಕುಂಠಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದರು.
ಮತದಾರರ ಪಟ್ಟಿಯಲ್ಲಿ ಹಲವಾರು ಲೋಪದೋಷಗಳಿದ್ದು, ವಿಳಾಸ ಸರಿಯಾಗಿ ಇಲ್ಲದ ಕಾರಣ ಆಕಾಂಕ್ಷಿಗಳ ಪ್ರಚಾರಕ್ಕೆ ಅಡ್ಡಿಯಾಗುತ್ತಿದೆ. ಕೆಲವು ಮತದಾರರಿಗೆ ಪತ್ರಗಳು ತಲುಪುತ್ತಿಲ್ಲ. ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವನಾಥ್ ಕಾಶಿ, ರಾಜಶೇಖರ್, ಚೇತನ್, ಮಧುಸೂದನ್, ಯಮುನಾ, ರಂಗೇಗೌಡ, ಮೂರ್ತಿ, ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post