ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (8) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು. ಎಲ್ಲರಿಗೂ ಶೇಕಡ ೯೦ರಷ್ಟು ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರಗೆ ದಾಖಲಿಸಾಗಿದೆ.
ನೇಪಾಳ ಮೂಲದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮದನ್ ಸೆಕ್ಯುರಿಟಿ ಗಾರ್ಡ್ ಮತ್ತು ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಾಗ ಪತ್ನಿ ಮತ್ತು ಮಕ್ಕಳು ಮಲಗಿದ್ದು, ಗ್ಯಾಸ್ ಸೋರಿಕೆಯಾಗಿರುವುದು ಗಮನಿಸದೆ ಒಲೆ ಹೊತ್ತಿಸಿದ ಪರಿಣಾಮ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಸಂತ್ರಸ್ತರು ಸಹಾಯಕ್ಕಾಗಿ ಕಿರುಚಾಡುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮೂವರು ಮಕ್ಕಳ ಪೈಕಿ ಒಂದು ಮಗುವನ್ನು ಹೊರತುಪಡಿಸಿ ಉಳಿದವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















