ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ #CM Siddaramaiah ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹಾಗೂ ಎಂಎಲ್’ಸಿ ಡಾ. ಧನಂಜಯ ಸರ್ಜಿ #Dr. Dhananjaya Sarji ಪ್ರತಿಭಟನೆ ನಡೆಸಿದರು.
ಗೋಪಿ ಸರ್ಕಲ್’ನಲ್ಲಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ನಡು ರಸ್ತೆಯಲ್ಲೇ ಕುಳಿತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿ.ವೈ. ರಾಘವೇಂದ್ರ, ಮೂಡಾ ಹಗರಣ ಸಂಬಂಧ ಆರಂಭದಲ್ಲಿ ಬಿಜೆಪಿ ಹೋರಾಟ ಮಾಡಿತ್ತು. ಆದರೆ, ಭಂಡತನ ಪ್ರದರ್ಶಿಸಿದ್ದ ಅವರು, ಬಿಜೆಪಿ ಹಾಗೂ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ವಿರುದ್ಧವೇ ಮಾತನಾಡಿದ್ದರು ಎಂದು ಕಿಡಿ ಕಾರಿದರು.
Also read: ಸಿಬಿಎಸ್ಇ ಸೌತ್ ಜೋನ್ ಬಾಕ್ಸಿಂಗ್ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಬಹುಮಾನ
ರಾಜ್ಯಪಾಲರು ನೀಡಿದ್ದ ತನಿಖೆ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದ್ದು, ನಮ್ಮ ನ್ಯಾಯಯುತ ಹೋರಾಟಕ್ಕೆ ಜಯ ಸಿಕ್ಕಿದೆ ಎಂದರು.
ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ಡಿಎನ್’ಎ ಒಳಗೇ ಇದೆ. ಕೇಂದ್ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2ಜಿ ಹಗರಣ, ಬೋಫೋರ್ಸ್, ರಫೇಸ್ ಸೇರಿದಂತೆ ಸಾಲು ಸಾಲು ಹಗರಣಗಳನ್ನು ದೇಶ ಕಂಡಿದೆ. ಇದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ಜನರು ಪ್ರತಿಪಕ್ಷ ಸ್ಥಾನದಲ್ಲಿ ಕೂರಿಸಿದ್ದಾರೆ ಎಂದು ಕಿಡಿ ಕಾರಿದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ಡಿ.ಎಸ್. ಅರುಣ್, ಪ್ರಮುಖರಾದ ದೀನದಯಾಳು, ನಾಗರಾಜ್ ಸೇರಿದಂತೆ ಜಿಲ್ಲಾ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















