ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ಮುಳುಗಡೆ ಪ್ರದೇಶದ ನಿರಾಶ್ರಿತ ಸಂತ್ರಸ್ತ ಕುಟುಂಬಗಳು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇಂದು ಭೇಟಿ ನೀಡಿ ಅವರ ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಿದರು.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಮತ್ತು ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅವರ ಬೇಡಿಕೆಗಳಿಗೆ ಅನುಗುಣವಾಗಿ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಪ್ರಾಮಾಣಿಕ ಪ್ರಯತ್ನದ ಕುರಿತು ವೇದಿಕೆಯ ಹೋರಾಟಗಾರರಿಗೆ ಮನವರಿಕೆ ಮಾಡಿಸಿದರು.
Also read: ನವೆಂಬರ್ 1ರಿಂದ ಒಂದು ತಿಂಗಳ ಕಾಲ ಕೆಎಸ್ಪಿಎಲ್ 2024 ಕ್ರಿಕೆಟ್ ಟೂರ್ನಿ
ನಿಮ್ಮೆಲ್ಲರ ಸತತ ನಾಲ್ಕನೇ ಬಾರಿಯ ನಿರಂತರ ಆಶೀರ್ವಾದದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಳಿಕ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಸೂಕ್ತ ನ್ಯಾಯ ಕೊಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಮುಳುಗಡೆ ಪ್ರದೇಶಕ್ಕೆ ಸಂಬಂಧ ಪಟ್ಟ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿ ಕೈಗೊಂಡಿರುವ ದಿಟ್ಟ ಕ್ರಮಗಳ ಕುರಿತು ಸಭೆಯ ಗಮನ ಸೆಳೆಯಲಾಯಿತು ಎಂದು ವಿವರಿಸಿದರು.
ನಿಮ್ಮೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸದಾ ಕಾಲ ಜೊತೆಯಾಗಿ ನಿಲ್ಲುತ್ತದೆ. ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರ ಹಿತ ಕಾಪಾಡಲು ಬದ್ಧವಾಗಿದೆ. ನಿಮ್ಮ ಭರವಸೆ ಉಳಿಸಿಕೊಳ್ಳಲು ಶ್ರಮಿಸುವ ವಾಗ್ದಾನ ಮಾಡುತ್ತೇನೆ. ನಿಮ್ಮ ನೋವಿನಲ್ಲಿ ನಾನು ಕೂಡ ಪಾಲುದಾರನಾಗಿದ್ದು, ಕೇಂದ್ರದ ಹಂತದಲ್ಲಿ ತುರ್ತಾಗಿ ಆಗಬೇಕಿರುವ ಪ್ರಮುಖ ಕಾರ್ಯಗಳ ಬಗ್ಗೆ ಗಮನ ಸೆಳೆಯುತ್ತೇನೆ ಎಂಬ ಸಂಕಲ್ಪ ತೊಡುತ್ತೇನೆ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಪ್ರಮುಖರಾದ ಗಣೇಶ್ ಪ್ರಸಾದ್, ಹಕ್ಕರೆ ಮಲ್ಲಿಕಾರ್ಜುನ್, ರಾಜನಂದಿನಿ ಸೇರಿದಂತೆ ಅನೇಕ ಮುಖಂಡರು ಜೊತೆಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















