ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಶನಿವಾರ ವಿಚಾರಣಾಧೀನ ಕೈದಿ ಬಸವರಾಜ್ (38) ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜೈಲಿನ ಶರಾವತಿ ವಾರ್ಡ್ನ ಕೊಠಡಿ ಸಂಖ್ಯೆ 42ರಲ್ಲಿ ಇದ್ದ ಬಸವರಾಜ್, ಉಟ್ಟಿದ್ದ ಪ್ಯಾಂಟನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು, ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂಲತಃ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ನಿವಾಸಿ ಬಸವರಾಜ್, ಬಳ್ಳಾರಿಯಲ್ಲಿ ಅದಿರು ಸಾಗಿಸುವ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಶಿಕಾರಿಪುರದ ಸೊಸೈಟಿ ಕೇರಿಯಲ್ಲಿ ವಾಸವಿದ್ದ ಬಸವರಾಜ್, ಜೂನ್ 11ರಂದು ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಮಂಜುಳಾ ಅವರ ಶೀಲ ಶಂಕಿಸಿ ಜಗಳವಾಡಿ ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದನು.
ನಂತರ ಶಿಕಾರಿಪುರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯದ ಬಂಧನಕ್ಕೆ ಒಪ್ಪಿಸಿದ್ದರು. ಬಸವರಾಜ್ ಹಾಗೂ ಮಂಜುಳಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















