ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ ಎಸ್. ನಾರಾಯಣ್, ಅವರ ಪತ್ನಿ ಹಾಗೂ ಪುತ್ರನ ವಿರುದ್ಧ ಎಫ್’ಐಆರ್ ದಾಖಲಾಗಿದೆ.
ಈ ಕುರಿತಂತೆ ಜ್ಞಾನಭಾರತಿ ಠಾಣೆಯಲ್ಲಿ ನಾರಾಯಣ್ ಅವರ ಎರಡನೇ ಪುತ್ರನ ಪತ್ನಿ ಪವಿತ್ರಾ ಅವರು ದೂರು ದಾಖಲಿಸಿದ್ದು, ಇದರನ್ವಯ, ಎಸ್. ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ, ಪುತ್ರ ಪವನ್ ವಿರುದ್ದ ಎಫ್’ಐಆರ್ ದಾಖಲಾಗಿದೆ.
ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.
ಹೀಗಿದೆ ದೂರಿನಲ್ಲಿ…!
ನಾನು ಹಾಗೂ ಎಸ್. ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದರೆ ಬಳಿಕ ಲಾಸ್ ಆಗಿ ಇನ್ಸಿö್ಟಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.
ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ಟರೂ ಸಹ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಎಸ್. ನಾರಾಯಣ್ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ. ಮುಂದಿನ ಕಾನೂನು ಕ್ರಮ ಏನಾಗುವುದು ಎಂಬುದನ್ನು ಕಾದು ನೋಡಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















