ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಸ್ವಚ್ಛತಾ ಹಿ ಸೇವಾ ಅಭಿಯಾನದ ಚಟುವಟಿಕೆಗಳಿಗೆ ಭಾರತೀಯ ನೈಋತ್ಯ ರೈಲ್ವೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾದರು.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛತೆ ಹಿ ಸೇವಾ – 2025, ಸ್ವಸ್ಥ ನಾರಿ ಶಕ್ತ ಕುಟುಂಬ ಅಭಿಯಾನಕ್ಕೆ ಚಾಲನೆ ನೀಡಿ ಮತ್ತು ಸ್ವಚ್ಛತೆ ಪ್ರತಿಜ್ಞೆ ಮಾಡಲಾಯಿತು.
ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ, ಸ್ವಚ್ಛತೆ ಕುರಿತು ಜಾಗೃತಿ ಪ್ರತಿಜ್ಞೆಯನ್ನು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಭಾಗವಹಿಸಿದವರಿಗೆ ಬೋಧಿಸಿದರು. ಸ್ವಚ್ಛತೆ ಮತ್ತು ಸಾರ್ವಜನಿಕ ಜವಾಬ್ದಾರಿಯ ಮಹತ್ವವನ್ನು ಅವರು ಒತ್ತಿ ಹೇಳಿದರು.
ಅಭಿಯಾನದ ಅಂಗವಾಗಿ ನಿಲ್ದಾಣದ ವ್ಯಾಪ್ತಿಯಲ್ಲಿಯೂ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗಿದ್ದು, ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯ ಅಧಿಕಾರಿಗಳು ಒಗ್ಗೂಡಿ ಸ್ವಚ್ಛತೆ ಮತ್ತು ಹಸಿರು ಪರಿಸರವನ್ನು ಕಾಯ್ದುಕೊಳ್ಳುವ ಪ್ರಯತ್ನದಲ್ಲಿ ತೊಡಗಿದರು.
ಈ ಕಾರ್ಯಕ್ರಮಕ್ಕೆ ಉತ್ಸಾಹಭರಿತ ಪ್ರತಿಕ್ರಿಯೆ ದೊರೆತಿದ್ದು, ಸ್ಥಿರ ಜೀವನಶೈಲಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಹರಡಿತು. ಗಣ್ಯರು ಹಾಗೂ ಸ್ವಯಂ ಸೇವಕರು ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಮರ ಬೆಳೆಸಲು ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿಕಾಯಿ, ಮಹಾಪ್ರಬಂಧಕರಾದ ಮುಕುಲ್ ಸರನ್ ಮಥೂರು, ಡಿಆರ್’ಎಂ ಹುಬ್ಬಳ್ಳಿ ಬೆಲಾ ಮೀನಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.
ಸ್ವಸ್ಥ ನಾರಿ ಶಕ್ತ ಕುಟುಂಬ ಅಭಿಯಾನ
ಇದೇ ಸಂದರ್ಭದಲ್ಲಿ ಸ್ವಸ್ಥ ನಾರಿ ಶಕ್ತ ಕುಟುಂಬ ಅಭಿಯಾನವನ್ನು ಹುಬ್ಬಳ್ಳಿಯ ಅಧಿಕಾರಿಗಳ ಕ್ಲಬ್’ನಲ್ಲಿ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಪ್ರೇರಣೆಯಿಂದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗದರ್ಶನದಡಿಯಲ್ಲಿ ಈ ಅಭಿಯಾನವನ್ನು ನಡೆಸಲಾಗಿದ್ದು, ಮಹಿಳೆಯರ ಆರೋಗ್ಯ ಮತ್ತು ಮಕ್ಕಳ ಸುಸ್ಥಿತಿಯ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿತ್ತು.

ಸೆಂಟ್ರಲ್ ಆಸ್ಪತ್ರೆ ಹುಬ್ಬಳ್ಳಿ, ಎಚ್’ಟಿಜಿ ಕ್ಯಾನ್ಸರ್ ಸೆಂಟರ್ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದೊಂದಿಗೆ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು. ಮಧುಮೇಹ, ರಕ್ತದೊತ್ತಡದ ಪರೀಕ್ಷೆ, ಬಾಯಿ, ಸ್ತನ ಹಾಗೂ ಗರ್ಭಾಶಯದ ಕ್ಯಾನ್ಸರ್ ಪರೀಕ್ಷೆ, ಕಣ್ಣಿನ ಪರೀಕ್ಷೆ, ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸೇವೆಗಳನ್ನು ನೀಡಲಾಯಿತು. ಹಲವಾರು ಉದ್ಯೋಗಿಗಳು ಹಾಗೂ ಅವರ ಕುಟುಂಬದವರು ಭಾಗವಹಿಸಿ ಈ ಸೇವೆಗಳ ಲಾಭ ಪಡೆದರು.
ಕೊನೆಯಲ್ಲಿ ಮಹಾಪ್ರಬಂಧಕರಾದ ಮುಕುಲ್ ಸರನ್ ಮಾಥುರ್ ಅವರು ರೈಲ್ ಸೌಧದಲ್ಲಿ ಸ್ವಚ್ಛತೆ ಪ್ರತಿಜ್ಞೆಯನ್ನು ನೀಡಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆ ಹಾಗೂ ಪರಿಸರವನ್ನು ಕಾಪಾಡುವ ಸಮೂಹದ ಜವಾಬ್ದಾರಿಯನ್ನು ಕೈಗೊಳ್ಳುವಂತೆ ಪ್ರೇರೇಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















