ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಕರಾವಳಿಯ ಕಂಬಳ #Kambala ಕ್ರೀಡೆಯನ್ನು ರಾಜ್ಯದ ಯಾವುದೇ ಭಾಗದಲ್ಲಿ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿಸಿದ್ದು, ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬಹುದು ಎಂದಿದೆ.
ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಮುಖ್ಯನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾ.ಸಿ.ಎಂ. ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ರಾಜ್ಯದ ನಿರ್ದಿಷ್ಟ ಭೌಗೋಳಿಕ ಪ್ರದೇಶ ಅಥವಾ ಕೆಲವು ಜಿಲ್ಲೆಗಳ ಆಚರಣಾ ಸಂಪ್ರದಾಯಗಳು ಇಡೀ ರಾಜ್ಯದ ಸಂಪ್ರದಾಯವಾಗಿರುತ್ತವೆ. ನಿರ್ದಿಷ್ಟ ಸಂಪ್ರದಾಯಗಳನ್ನು ಆಚರಿಸಲಾಗುವ ಕರ್ನಾಟಕದ ಭಾಗಗಳನ್ನು ರಾಜ್ಯಕ್ಕೆ ಸೇರಿದ್ದಲ್ಲ ಎನ್ನಲಾಗುತ್ತದೆಯೇ? ಹಾಗೆ ಹೇಳಿದ್ದಲ್ಲಿ ಅದು ವಿಭಜಕ ಭಾವನೆ ಆದೀತು ಎಂದು ಕರ್ನಾಟಕ ಹೈಕೋರ್ಟ್ #HighCourt ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತು.
ರಾಜ್ಯದ ಬೇರೆ ಕಡೆಗಳಲ್ಲಿ ಕಂಬಳ ಆಯೋಜನೆ ಸಂಬಂಧ ಕಾನೂನು-ನಿಯಮಗಳ ರೀತಿ ರಾಜ್ಯ ಸರ್ಕಾರ ತೀರ್ಮಾನಿಸಬಹುದು ಎಂದು ಮೌಖಿಕವಾಗಿ ಹೇಳಿದೆ. ಅಲ್ಲದೆ, ಇದರ ಬಗ್ಗೆ ವಿವರವಾದ ಆದೇಶ ಹೊರಡಿಸಲಾಗುವುದು ಎಂದಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶತಮಾನಗಳಿಂದ ನಡೆಸಿಕೊಂಡು ಬರಲಾಗುತ್ತಿರುವ ಪಾರಂಪರಿಕ ಸಂಪ್ರದಾಯವಾಗಿರುವ ಕಂಬಳ ಕ್ರೀಡೆಯನ್ನು ರಾಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಆಯೋಜನೆ ಮಾಡುವುದನ್ನು ನಿರ್ಬಂಧಿಸಬೇಕು. ಈ ಕುರಿತಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು, ಪಿಲಿಕುಳ ನಿಸರ್ಗಧಾಮದಲ್ಲಿ (ಜೈವಿಕ ಉದ್ಯಾನವನ) ಉದ್ದೇಶಿತ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ ಪೇಟಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















