ಕಲ್ಪ ಮೀಡಿಯಾ ಹೌಸ್ | ನಂಜನಗೂಡು |
ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ #Nanjanagudu Shrikanteshwara Temple ಕುಟುಂಬ ಸಮೇತ ಭೇಟಿ ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು, ತುಲಾಭಾರ ಮಾಡಿಸಿ, ಹರಕೆ ತೀರಿಸಿದ್ದಾರೆ.
ಕುಮಾರಸ್ವಾಮಿ ಅವರು ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಕುಮಾರಸ್ವಾಮಿ ಅವರು ಶ್ರೀಕಂಠೇಶ್ವರ ಸ್ವಾಮಿಗೆ ಬೆಲ್ಲದ ತುಲಾಭಾರ ಮಾಡಿಸುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.
ಕೆಲವು ದಿನಗಳಿಂದ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಬಾಧಿಸುತ್ತಿತ್ತು. ಆ ವೇಳೆಯಲ್ಲಿ ತಮ್ಮ ಪತಿಯ ಚೇತರಿಕೆಗಾಗಿ ಅನಿತಾ ಕುಮಾರಸ್ವಾಮಿಯವರು ಶ್ರೀಕಂಠೇಶ್ವರ ಸ್ವಾಮಿಗೆ ಹರಕೆ ಹೊತ್ತಿದ್ದರು ಎಂದು ಹೇಳಲಾಗಿದೆ.
ಕುಮಾರಸ್ವಾಮಿಯವರು ಈಗ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಹಿತ ತೆರಳಿ ಬೆಲ್ಲದ ತುಲಾಭಾರ ಮಾಡಿಸಿ, ಸ್ವಾಮಿಗೆ ಅರ್ಪಿಸಿದ್ದಾರೆ. ಅಲ್ಲದೇ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಮಾಡಿ ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ವರದಿಯಾಗಿದೆ.
ಮೈಸೂರು ಪ್ರವಾಸದ ಭಾಗವಾಗಿ ಇಂದು ನಂಜನಗೂಡಿಗೆ ಆಗಮಿಸಿದ ಕುಮಾರಸ್ವಾಮಿ ದಂಪತಿಗೆ ಸ್ಥಳೀಯ ಜೆಡಿಎಸ್ ನಾಯಕರಿಂದ ಭಾರಿ ಸ್ವಾಗತ ದೊರಕಿತು. ಅವರ ಆಗಮನದ ಹಿನ್ನೆಲೆಯಲ್ಲಿ ದೇಗುಲ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಇನ್ನು, ನಾಡ ದೇವತೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಕುಮಾರಸ್ವಾಮಿ ದಂಪತಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ದೇವಾಲಯದ ವತಿಯಿಂದ ಪ್ರಸಾದ ನೀಡಿ, ಗೌರವ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















