ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್(80) ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯ ಹಾಗೂ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.
ಉಮೇಶ್ ಅವರು 1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳ ತನಕವೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಉಮೇಶ್ ಅವರು ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು. ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು.
1945ರ ಏಪ್ರಿಲ್ 22ರಂದು ಮೈಸೂರಿನಲ್ಲಿ ಜನಿಸಿದ ಉಮೇಶ್ ಅವರು ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು. ʻಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ…..ʼ ʻಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..ʼ ಹೀಗೆ ತಮ್ಮ ಅಸಾಮಾನ್ಯ ರೀತಿಯ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು.
350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅವರು ಅಭಿನಯಿಸಿದ್ದಾರೆ. 1945ರ ಏಪ್ರಿಲ್ 24ರಂದು ಮೈಸೂರಿನಲ್ಲಿ ಜನಿಸಿದ ಅವರು 1960ರಲ್ಲಿ ಬಿಆರ್ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದವು ಉಮೇಶ್ ನಟನೆಯ ಪ್ರಮುಖ ಸಿನಿಮಾಗಳು.
ʻಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನ ಅರಸಿಬಂದಿವೆ. ಉಮೇಶರ 5 ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















