ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ #Second World Ayurveda Conference ಜನಜಾಗೃತಿಗಾಗಿ ಬೆಂಗಳೂರಿನ ಗಿರಿನಗರದಿಂದ – ಬಸವನಗುಡಿ – ಗಾಂಧಿ ಬಝಾರ್ – ಗಿರಿನಗರದವರೆಗೆ ಬೃಹತ್ ಆಯುರ್ವೇದ ಬೈಕ್ ಜಾಥಾ ನಡೆಯಿತು.
ಬೈಕ್ ಜಾಥಾವನ್ನು #Bike Jatha ಉದ್ಘಾಟಿಸಿದ ಮಾತನಾಡಿದ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು, ಆಟ – ಪಾಠ ಹಾಗೂ ಚಿಂತನೆ ಸರಿಯಾದಾಗ ಆರೋಗ್ಯಪೂರ್ಣ ಜೀವನ ನಮ್ಮದಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯರದ್ದು ವಸುಧೈವ ಕುಟುಂಬಕಂ ಎಂಬ ವಿಶ್ವಭ್ರಾತೃತ್ವದ ಚಿಂತನೆಯಾಗಿದೆ. ಕಾಯಿಲೆಗಳು ರಸ್ತೆಯ ಹಂಪ್ ಇದ್ದಂತೆ. ನಾವು ವೇಗವಾದ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಕಾಯಿಲೆಗಳು ಬರುತ್ತವೆ ಎಂದು ಅಭಿಪ್ರಾಯಪಟ್ಟರು.
ಸಾವಿರಾರು ವರ್ಷಗಳ ಹಿಂದೆಯೇ ಆಯುರ್ವೇದದಲ್ಲಿ ಗರ್ಭದ ಬಗ್ಗೆ ವೈಜ್ಞಾನಿಕ ಮಾಹಿತಿಗಳು ಇದೆ. ಆಗ ಯಾವ Ultrasound Scanning ಗಳು ಇರಲಿಲ್ಲ. ಆದರೂ ಅಂತಹ ಸೂಕ್ಷ್ಮ ಮಾಹಿತಿಗಳನ್ನು ನಮ್ಮ ಆಯುರ್ವೇದ ತಜ್ಞರು ಕಂಡುಕೊಂಡಿದ್ದರು. ಇದು ಆಯುರ್ವೇದದ ಹಿರಿಮೆಗೆ ಒಂದು ಕಿರು ಉದಾಹರಣೆ. ಈ ಹಿನ್ನೆಲೆಯಲ್ಲಿ ಆಯುರ್ವೇದದ ಮಹತಿಯನ್ನು ಸಾರಲು ವಿಶ್ವ ಸಮ್ಮೇಳನ ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಬಸವನಗುಡಿಯ ಶಾಸಕ ಎಲ್. ಎ. ರವಿ ಸುಬ್ರಹ್ಮಣ್ಯ, ಖ್ಯಾತ ನಟ ಅಜಯ್ ರಾವ್, ಅತ್ರಿಮೆಡ್ ಫಾರ್ಮಾಸ್ಯುಟಿಕಲ್’ನ CEO ಹೃಷಿಕೇಶ್ ದಾಮ್ಲೇ, ಹಿರಿಯ ಪತ್ರಕರ್ತ ವಿನಾಯಕ ಭಟ್ಟ ಮೂರೂರು ಮುಂತಾದವರು ಉಪಸ್ಥಿತರಿದ್ದು ಬೈಕ್ ಜಾಥಾಕ್ಕೆ ಚಾಲನೆ ನೀಡಿದರು.
ವಿಶ್ವ ಆಯುರ್ವೇದ ಸಮ್ಮೇಳನದ ರುವಾರಿ ಡಾ. ಗಿರಿಧರ ಕಜೆ ಮಾತನಾಡಿ, ಆಯುರ್ವೇದದ ಮಹತ್ವವನ್ನು ಜನತೆಯ ಮುಂದಿಡಲು ಬೃಹತ್ ರೂಪದಲ್ಲಿ ಸಮ್ಮೇಳನವನ್ನು ಸಂಘಟಿಸಲಾಗಿದೆ. ಆಯುರ್ವೇದ ವೈದ್ಯರು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ, ಜನ ಸಾಮಾನ್ಯರಿಗೂ ಪ್ರಯೋಜನಕಾರಿಯಾಗುವಂತೆ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ಆಹಾರ ಪ್ರದರ್ಶಿನಿ, ಆಯುರ್ವೇದ ಪಾಕೋತ್ಸವ, ಧನ್ವಂತರಿ ಮಹಾಯಜ್ಞ, ಆಯುರ್ವೇದ ಮೆಗಾ ಎಕ್ಸ್’ಪೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಲೇಸರ್ ಶೋ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿದೆ.
ದಕ್ಷಿಣದ ಏಳು ರಾಜ್ಯಗಳ 137 ಆಯುರ್ವೇದ ವಿದ್ಯಾಲಯಗಳನ್ನು ಧನ್ವಂತರಿ ರಥಯಾತ್ರೆಯು ಈಗಾಗಲೇ ಸಂದರ್ಶಿಸಿದ್ದು, ನಾಡಿನಾದ್ಯಂತ ರಥಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಮ್ಮೇಳನಕ್ಕೆ 3-4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















