ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ #Five Guarantees ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ #Shakti Yojane ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ #Smart Card ವಿತರಿಸಲು ತೀರ್ಮಾನಿಸಿರುವುದು ಅವೈಜ್ಞಾನಿಕ ಹಾಗೂ ಅಪ್ರಸ್ತುತವಾಗಿರುವುದರಿಂದ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ ಹಾಗೂ ಎಲ್ಲಾ ತಾಲೂಕು ಮತ್ತು ಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನು ವಿತರಿಸಿದೆ. ಅಲ್ಲದೆ, ಕೇಂದ್ರ ಚುನಾವಣಾ ಆಯೋಗದ ಗುರುತಿನ ಚೀಟಿ ನೀಡಿದೆ. ಇದನ್ನು ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಪಡೆಯುತ್ತಿದ್ದಾರೆ.
ರಾಜ್ಯ ಸರ್ಕಾರ ಉದ್ದೇಶಿಸಿರುವ ಸ್ಮಾರ್ಟ್ ಕಾರ್ಡ್ಗಳನ್ನು ಕಂದಾಯ ಇಲಾಖೆ ಅಥವಾ ಸಾರಿಗೆ ಇಲಾಖೆ ಮೂಲಕ ರಾಜ್ಯಾದ್ಯಂತ ಪ್ರತಿಯೊಬ್ಬ ಮಹಿಳೆಯರಿಗೂ ವಿತರಿಸುವುದು ಅಸಾಧ್ಯ. ಹಾಗೂ ಬಹುತೇಕ ಶಕ್ತಿ ಯೋಜನೆಯ ಮಹಿಳೆಯರು ವಂಚಿತರಾಗುವ ಸಾಧ್ಯತೆಗಳಿವೆ. ಎಸ್ಸಿ, ಎಸ್ಟಿ ಮಹಿಳೆಯರು ಎಷ್ಟು ಪ್ರಮಾಣದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಅಂಕಿ ಅಂಶ ಬೇಕಾದರೆ ಅದಕ್ಕೆ ಬೇರೆಯದೇ ಆದಂತಹ ಮಾರ್ಗವನ್ನು ಕಂಡುಕೊಳ್ಳಲಿ. ಹಾಗಾಗಿ ಈ ಅವೈಜ್ಞಾನಿಕ, ಅಪ್ರಸ್ತುತ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆಯುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಹೆಚ್.ಎನ್.ವೆಂಕಟೇಶ್, ಹೆಚ್.ಎಂ.ಸಂಗಯ್ಯ, ಅಲೀಂ ಖಾನ್, ಜಿ.ಎಂ.ವಿಜಯ್ಕುಮಾರ್, ಕೆ.ಬಸವರಾಜ್, ಜನಮೇಜಿರಾವ್, ಎಲ್. ಆದಿಶೇಷ, ಕೋಡ್ಲು ಶ್ರೀಧರ್, ಮಂಜುನಾಥ್ ಇನ್ನಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















