ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ಮಗುವಿನ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಅವು ಸಹಾಯ ಮಾಡುತ್ತವೆಂದು ಕೆಂಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಬಿ.ವಿ. ನೇತ್ರಾವತಿ ತಿಳಿಸಿದರು.
ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಭವಾನಿ ರಾವ್ ಕೇರಿಯ ಮೈತ್ರಿ ಬಾಲವಿಕಾಸ ಶಾಲೆಯ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಸಬಾ 2ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗಣೇಶ್.ಎಸ್ ರವರು ವಿದ್ಯಾರ್ಥಿಗಳು ಏಕಾಗ್ರತೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮೊಬೈಲ್ ಬಳಕೆಯು ಒಂದು ವ್ಯಸನವಾಗಿದೆ. ಅದರಿಂದ ಹೊರಬರಬೇಕು. ಈ ರೀತಿಯ ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪಠ್ಯದ ಹೊರಗೆ ಇರುವ ಕಲಿಕಾಂಶಗಳ ಪರಿಚಯ ಮಾಡಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಂಶುಪಾಲ ವಿಶ್ವನಾಥ ಮಾತನಾಡಿ, ಶಿಕ್ಷಕರ ಅವಿರತ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮವಾಗಿ ಕಲಿಯಲು ಕಾರಣವಾಗಿದೆ.ತರಗತಿಯ ನಾಲ್ಕು ಗೋಡೆಯ ಮಧ್ಯೆ ಕಲಿತ ಜ್ಞಾನವನ್ನು ಪರೀಕ್ಷಿಸಲು ಈ ರೀತಿಯ ರಸಪ್ರಶ್ನೆ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಏರ್ಪಡಿಸಲಾಗಿದೆ.ಇದರಿಂದ ಪೋಷಕರು ತಮ್ಮ ಮಕ್ಕಳ ಕಲಿಕಾ ಹಂತವನ್ನು ಕಂಡು ಸಂತೋಷ ಪಡುತ್ತಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಾದ ಅನಿಕೇತ, ಅಮೃತ, ಬಿಂದು, ಮಾನ್ವಿತಾ, ಅಮೃತ, ವಚನ, ಜನನಿ, ಮಂಕುತಿಮ್ಮನ ಕಗ್ಗ ಮತ್ತು ಪ್ರಭಾವಿ ಕಬೀರ್ ದೋಹೆ ಹೇಳಿದರು.
ಯುಕೆಜಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ಮಮತಾ ಸ್ವಾಗತಿಸಿ, ಲಕ್ಷ್ಮಿ ವಂದಿಸಿ, ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
