ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ #Dr. Sameeksha Reddy death ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.
ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಶಾಸಕರು, “ಅಸ್ವಸ್ಥ ಪ್ರಾಣಿಗೆ ಚಿಕಿತ್ಸೆ ನೀಡಲು ತೆರಳಿದ್ದ ಒಬ್ಬ ಪ್ರತಿಭಾವಂತ ಯುವ ವೈದ್ಯೆಯನ್ನು ನಾವು ಕಳೆದುಕೊಂಡಿರುವುದು ಅತ್ಯಂತ ಹೃದಯವಿದ್ರಾವಕ ಸಂಗತಿ. ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಅವರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆ ಇತ್ತೇ? ಈ ಘಟನೆಯಲ್ಲಿ ಇಲಾಖೆಯ ನಿರ್ಲಕ್ಷ್ಯವಿದೆಯೇ? ಎನ್ನುವುದರ ಬಗ್ಗೆ ಕೂಡಲೇ ಉನ್ನತ ಮಟ್ಟದ ತನಿಖೆಯಾಗಬೇಕು,” ಎಂದು ಒತ್ತಾಯಿಸಿದರು.
ರಾಜ್ಯದ ಮೃಗಾಲಯಗಳು ಹಾಗೂ ಪಶುವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಗುತ್ತಿಗೆ ಆಧಾರದ ಬದಲಿಗೆ ಕಾಯಂ ಪಶುವೈದ್ಯರನ್ನು (Permanent Doctors) ನೇಮಕ ಮಾಡಿಕೊಳ್ಳಬೇಕು ಎಂದು ಇಂದು ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
“ಕೇವಲ ಸಂತಾಪ ಹಾಗೂ ಪರಿಹಾರವಷ್ಟೇ ಅಲ್ಲದೆ, ಮೃಗಾಲಯಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಸರ್ಕಾರದ ಜವಾಬ್ದಾರಿ,” ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಶಾಸಕರ ಈ ಪ್ರಸ್ತಾವನೆಗೆ ಸದನದಲ್ಲಿ ಮಾಜಿ ಗೃಹ ಸಚಿವರು ಹಾಗೂ ತೀರ್ಥಹಳ್ಳಿ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರು ಬೆಂಬಲ ವ್ಯಕ್ತವಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















