ಕಲ್ಪ ಮೀಡಿಯಾ ಹೌಸ್ | ಆನಂದಪುರ |
ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಐಗಿನ ಬಯಲು ಕ್ರಾಸ್ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿಂದ ಅಡಿಕೆ ಸಸಿಗಳನ್ನು ಲೋಡ್ ಮಾಡಿಕೊಂಡು ಬರುತ್ತಿದ್ದ ಲಾರಿಯು ಐಗಿನ ಬಯಲು ಕ್ರಾಸ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ.
ಚಾಲಕ ಸೇರಿದಂತೆ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಲಾರಿಯಿಂದ ಹೊರತೆಗೆದು ಪ್ರಾಥಮಿಕ ಚಿಕಿತ್ಸೆಗೆ ಸಹಕರಿಸಿದರು.
ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಪಘಾತ ನಡೆದ ಸ್ಥಳದಲ್ಲಿ ವಾಹನ ನಿಲ್ಲಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ಸ್ಥಳಕ್ಕೆ ಬರುವಂತೆ ಸೂಚಿಸಿ ತೆರಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















