ಕಲ್ಪ ಮೀಡಿಯಾ ಹೌಸ್ | ಮೈಸೂರು |
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ Murder ಅಂತ್ಯವಾಗಿರುವ ಭೀಕರ ಘಟನೆ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಪುಷ್ಪ(24) ಹಾಗೂ ಆರೋಪಿ ಪತಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ.
ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಇದೇ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ತೀವ್ರವಾಗಿ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.
ಎಂದಿನಂತೆ ನಿನ್ನೆ ತಡರಾತ್ರಿ ಪುಷ್ಪ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ಅಷ್ಟಕ್ಕೇ ನಿಲ್ಲಿಸದ ಮಹೇಶ್ ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಪತ್ನಿಯನ್ನು ಕೊಂದ ನಂತರ ಪಶ್ಚಾತ್ತಾಪಕ್ಕೊಳಗಾದನೋ ಅಥವಾ ಕಾನೂನಿನ ಭಯದಿಂದಲೋ ಗೊತ್ತಿಲ್ಲ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Comments 1