ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭೆ, ರಾಜ್ಯ ವಿಧಾನಸಭೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ “ಒಂದು ರಾಷ್ಟ್ರ, ಒಂದು ಚುನಾವಣೆ” one Nation, one election ಪ್ರಸ್ತಾವನೆ ಕುರಿತು ದೇಶದಾದ್ಯಂತ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸುತ್ತಿರುವ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಪಿ.ಪಿ. ಚೌದರಿ P P Choudhari ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಏಕಕಾಲಿಕ ಚುನಾವಣೆ ಜಾರಿಯಾದಲ್ಲಿ ದೇಶಕ್ಕೆ ಸುಮಾರು ₹7 ಲಕ್ಷ ಕೋಟಿ ಉಳಿತಾಯವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಚುನಾವಣಾ ವೆಚ್ಚ ಕಡಿಮೆಯಾಗುವುದರಿಂದ ಉಳಿಯುವ ಹಣವನ್ನು ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಬಡವರ ಕಲ್ಯಾಣ ಹಾಗೂ ಸಾರ್ವಜನಿಕ ಸೇವೆಗಳ ಬಲವರ್ಧನೆಗೆ ಬಳಸಬಹುದು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಇದಲ್ಲದೆ, ನಿರಂತರವಾಗಿ ನಡೆಯುವ ಚುನಾವಣೆಗಳಿಂದ ಉಂಟಾಗುವ ಆಡಳಿತಾತ್ಮಕ ವ್ಯತ್ಯಯ ಕಡಿಮೆಯಾಗುವುದರಿಂದ ದೇಶದ ಜಿಡಿಪಿ ಬೆಳವಣಿಗೆ ದರವು ಶೇಕಡಾ 1.6ರಷ್ಟು ಏರಿಕೆಯಾಗುವ ಸಾಧ್ಯತೆಯೂ ಇದೆ ಎಂದು ಅಂದಾಜಿಸಲಾಗಿದೆ.
Also read: ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?
ಪ್ರಸ್ತುತ ಜಂಟಿ ಸಂಸದೀಯ ಸಮಿತಿ ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ತಿದ್ದುಪಡಿ ಮಸೂದೆಗಳನ್ನು ಪರಿಶೀಲಿಸುತ್ತಿದೆ. ಈ ಸಮಿತಿಯಲ್ಲಿ 39ಕ್ಕೂ ಹೆಚ್ಚು ಸದಸ್ಯರಿದ್ದು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಅರ್ಥಶಾಸ್ತ್ರಜ್ಞರು ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ.
ಗುಜರಾತ್ನ GIFT Cityನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಮಿತಿ ಚರ್ಚೆ ನಡೆಸಿತು. ಸಭೆಯ ಬಳಿಕ ಮಾತನಾಡಿದ ಚೌಧರಿ, ಏಕಕಾಲಿಕ ಚುನಾವಣೆಗಳಿಂದ ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ಜಿಎಸ್ಟಿ ಸಂಗ್ರಹ ಮತ್ತು ಶಿಕ್ಷಣ ಕ್ಷೇತ್ರಗಳಿಗೂ ಸಕಾರಾತ್ಮಕ ಪರಿಣಾಮ ಉಂಟಾಗಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಸುಧಾರಣೆಯ ದೃಷ್ಟಿಕೋನದ ಭಾಗವಾಗಿ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದಲ್ಲಿ ರಚಿಸಲಾದ ಸಮಿತಿಯು ಕೂಡ ಏಕಕಾಲಿಕ ಚುನಾವಣೆಗಳನ್ನು ಶಿಫಾರಸು ಮಾಡಿತ್ತು. ಈ ಪ್ರಸ್ತಾವನೆ ಕುರಿತು ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ ಚರ್ಚೆಗಳು ಇನ್ನಷ್ಟು ಚುರುಕುಗೊಂಡಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















