ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣನವರು ಇಂದು ಯಲಹಂಕ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 11014/11013 ಕೊಯಮತ್ತೂರು -ಲೋಕಮಾನ್ಯ ತಿಲಕ್ ಟರ್ಮಿನಸ್ (ಮುಂಬೈ)- ಕೊಯಮತ್ತೂರು ಎಕ್ಸ್ಪ್ರೆಸ್ನ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದರು.
ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್, ಸನ್ಮಾನ್ಯ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಮತ್ತು ಯಲಹಂಕದ ಶಾಸಕ ಎಸ್.ಆರ್. ವಿಶ್ವನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ವಿ. ಸೋಮಣ್ಣನವರು, ಯಲಹಂಕದಲ್ಲಿ ಈ ರೈಲಿಗೆ ನೀಡಿರುವ ಹೆಚ್ಚುವರಿ ನಿಲುಗಡೆಯಿಂದ ಈ ಪ್ರದೇಶದ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಯಲಹಂಕ ತ್ವರಿತ ಅಭಿವೃದ್ಧಿಯನ್ನು ಕಾಣುತ್ತಿದೆ ಮತ್ತು ಬೆಂಗಳೂರು ನಗರದಲ್ಲಿನ ರೈಲು ನಿಲ್ದಾಣಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು, ಯಲಹಂಕದಲ್ಲಿ ಹೊಸ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಯೋಜಿಸಲಾಗಿದೆ ಎಂದು ಅವರು ಹೇಳಿದರು.
Also read: A.G. Srinivas assumes charge as Additional General Manager of SWR
ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲು ನಿಲ್ದಾಣಗಳನ್ನು ವಿಶ್ವ ದರ್ಜೆಯ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಬೆಂಗಳೂರು ಕಂಟೋನ್ಮೆಂಟ್-ವೈಟ್ಫೀಲ್ಡ್ ಚತುಷ್ಪಥ ಯೋಜನೆ ಉತ್ತಮವಾಗಿ ಪ್ರಗತಿಯಲ್ಲಿದೆ. ಸುರಕ್ಷತೆಯನ್ನು ಸುಧಾರಿಸಲು ಭಾರತೀಯ ರೈಲ್ವೆಯು ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್ಗಳನ್ನು ಹಂತಹಂತವಾಗಿ ತೆಗೆದುಹಾಕುವತ್ತ ಕೆಲಸ ಮಾಡುತ್ತಿದೆ. ವೈಟ್ಫೀಲ್ಡ್ ಮತ್ತು ಕೋಲಾರವನ್ನು ಹೊಸಕೋಟೆ ಮೂಲಕ ಸಂಪರ್ಕಿಸುವ ಹೊಸ ನೇರ ರೈಲು ಮಾರ್ಗವನ್ನು ಸಹ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.
ಈ ಹಿಂದೆ ವಿಶೇಷ ರೈಲುಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಹಲವಾರು ರೈಲುಗಳನ್ನು ಈಗ ನಿಯಮಿತ ಸೇವೆಗಳಾಗಿ ಪರಿವರ್ತಿಸಲಾಗಿದೆ. ಇದು ಹೆಚ್ಚಿನ ಅನುಕೂಲತೆಯನ್ನು ಒದಗಿಸುತ್ತದೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಶ್ರೀ ವಿ. ಸೋಮಣ್ಣ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕೆ. ಸುಧಾಕರ್ ರವರು, ಈ ರೈಲಿಗೆ ಯಲಹಂಕದಲ್ಲಿ ನಿಲುಗಡೆ ನೀಡಿರುವುದರಿಂದ ವಿದ್ಯಾರ್ಥಿಗಳು, ಕಾರ್ಮಿಕರು, ವೃತ್ತಿಪರರು ಮತ್ತು ಈ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಹೇಳಿದರು. ಯಲಹಂಕದ ತ್ವರಿತ ಬೆಳವಣಿಗೆಯನ್ನು ಪರಿಗಣಿಸಿ ಹೆಚ್ಚಿನ ರೈಲುಗಳಿಗೆ ನಿಲುಗಡೆ ಒದಗಿಸುವುದನ್ನು ಪರಿಗಣಿಸುವಂತೆ ಅವರು ರೈಲ್ವೆ ಸಚಿವರನ್ನು ವಿನಂತಿಸಿದರು.
ಚಿಕ್ಕಬಾಣಾವರ–ಗೊಲ್ಲಹಳ್ಳಿ ಮತ್ತು ಸೋಲದೇವನಹಳ್ಳಿ ರಸ್ತೆ ಮೇಲ್ಸೇತುವೆ (ಆರ್ಒಬಿ) ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದ ಸಂಸದರು, ಈ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ವಿನಂತಿಸಿದರು.
ಯಲಹಂಕದಲ್ಲಿ ಹೆಚ್ಚುವರಿ ನಿಲುಗಡೆ ಒದಗಿಸಿದ್ದಕ್ಕಾಗಿ ಎಸ್.ಆರ್. ವಿಶ್ವನಾಥ್ ಅವರು ಮಾನ್ಯ ಸಚಿವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಇದು ಈ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವನ್ನು ನೀಡುತ್ತದೆ ಎಂದು ಹೇಳಿದರು.
ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ಪುರಿಯಾ, ಇತರ ರೈಲ್ವೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
29 ಜೂನ್ 2026ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11014 ಕೊಯಮತ್ತೂರು–ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲು ಯಲಹಂಕ ರೈಲು ನಿಲ್ದಾಣಕ್ಕೆ ಸಂಜೆ 4:41 ಗಂಟೆಗೆ ಆಗಮಿಸಿ, ಸಂಜೆ 4:43 ಗಂಟೆಗೆ ನಿರ್ಗಮಿಸಲಿದೆ.
30 ಜೂನ್ 2026ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್ –ಕೊಯಮತ್ತೂರು ಎಕ್ಸ್ಪ್ರೆಸ್ ರೈಲು ಯಲಹಂಕ ರೈಲು ನಿಲ್ದಾಣಕ್ಕೆ ಸಂಜೆ 7:28 ಗಂಟೆಗೆ ಆಗಮಿಸಿ, ಸಂಜೆ 7:30 ಗಂಟೆಗೆ ನಿರ್ಗಮಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








