ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ವೇಗವಾಗಿ ನಡೆಯುತ್ತವೆ. ಈ ಮಹತ್ವದ ಹಂತದಲ್ಲಿ ಜೀವನ ಮೌಲ್ಯಗಳು ಮತ್ತು ನೀತಿ ಪಾಠಗಳನ್ನು ಸರಳವಾಗಿ, ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬೋಧಿಸುವುದು ಅತ್ಯಗತ್ಯ ಎಂದು ‘ಕಿಶೋರ ದೀಪಿಕಾ’ ಪುಸ್ತಕದ ಸಂಪಾದಕಿ ಶ್ರೀಮತಿ ಹೆಚ್. ಎಂ. ರುಕ್ಮಿಣಿ ನಾಯಕ್ ಅಭಿಪ್ರಾಯಪಟ್ಟರು.
ನಗರದ ಸನ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಥನ ಹಾಗೂ ಸಂಸ್ಕಾರ ಭಾರತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕಿಶೋರ ದೀಪಿಕಾ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಾಲೆಗಳಲ್ಲಿ ನೀತಿ ಶಿಕ್ಷಣಕ್ಕೆ ಪ್ರತ್ಯೇಕ ಸಮಯವನ್ನು ಮೀಸಲಿಡುವ ಪ್ರಯತ್ನಗಳು ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಶೋಕ್ ಕಾಮತ್ ಮಾತನಾಡಿ, ಸ್ವಾವಲಂಬನೆಯೇ ಯಶಸ್ವಿ ಜೀವನದ ಆಧಾರ ಎಂದು ಹೇಳಿದರು. ತಮ್ಮ ಜೀವನದ ಅನುಭವವನ್ನು ಹಂಚಿಕೊಂಡ ಅವರು, ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಸಣ್ಣ ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ನಾಲ್ಕು ವರ್ಷ ದುಡಿದು ಸಂಪಾದಿಸಿದ ಹಣದಲ್ಲಿಯೇ ಫ್ರಾನ್ಸ್ನಲ್ಲಿ ಉನ್ನತ ಶಿಕ್ಷಣ ಪಡೆದದ್ದು ತಮ್ಮ ಜೀವನದ ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು. ಈ ಸಾಧನೆ ತಂದೆಗೆ ಅಪಾರ ಸಂತೋಷ ತಂದಿತ್ತು ಎಂದು ಅವರು ಸ್ಮರಿಸಿದರು.
Also read>> Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ
ಇಂದಿನ ವೇಗದ ಮತ್ತು ಒತ್ತಡದ ಜೀವನದಲ್ಲಿ ಪೋಷಕರು ಮೊಬೈಲ್ ಹಾಗೂ ಉದ್ಯೋಗದ ವ್ಯಸ್ತತೆಯಲ್ಲಿ ತೊಡಗಿಸಿಕೊಂಡು ಮಕ್ಕಳಿಗೆ ಸಮಯ ನೀಡುವುದಿಲ್ಲ. ಶಾಲೆಯ ಅನುಭವಗಳನ್ನು ಹಂಚಿಕೊಳ್ಳಲು ಮಕ್ಕಳಿಗೆ ಮೊದಲ ಆಶ್ರಯವೇ ತಂದೆ-ತಾಯಿಯರು. ಅವರ ಮಾತುಗಳನ್ನು ಕಾಳಜಿಯಿಂದ ಆಲಿಸಿದರೆ ಮಕ್ಕಳ ಮನಸ್ಥಿತಿ ಅರಿಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸನ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಆಕಾಶ್ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಸಮಾಜ ಎಲ್ಲರೂ ಸಮಾನ ಹೊಣೆಗಾರಿಕೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಮಕ್ಕಳ ಜವಾಬ್ದಾರಿಯನ್ನು ಒಬ್ಬರ ಮೇಲೆ ಮತ್ತೊಬ್ಬರು ಹೊರಿಸುವ ಬದಲು ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಉತ್ತಮ ಸ್ನೇಹಿತರು ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತಾರೆ. ನಾವು ಮಾತ್ರ ಒಳ್ಳೆಯವರಾಗುವುದಲ್ಲ, ಸಮಾಜದಲ್ಲಿಯೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿಯನ್ನು ಹೊತ್ತಿರಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಷಾ ನಟೇಶ್ ಕಾಸರವಳ್ಳಿ ಸ್ವಾಗತಿಸಿದರು. ಡಾ. ರಂಜನಿ ಬಿದರಳ್ಳಿ ಕಾರ್ಯಕ್ರಮ ನಿರೂಪಿಸಿದರು. ನಿತಿನ್ ವಂದಿಸಿದರು. ಆರ್ಎಸ್ಎಸ್ ಜಿಲ್ಲಾ ಸಂಘಚಾಲಕ ರಂಗನಾಥ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬಾಲಗೋಕುಲ ಮತ್ತು ಸಂಸ್ಕಾರ ಭಾರತಿ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







