ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಕ್ಷದ ಹಿತ ಹಾಗೂ ಮುಂದಿನ ಚುನಾವಣೆಗಳ ದೃಷ್ಟಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲವಾಗಿ ನಿಲ್ಲಲು ನಿರ್ಧರಿಸಿದ್ದೇನೆ. ರಾಜೀನಾಮೆ ನೀಡದೆ ಪಕ್ಷದಲ್ಲೇ ಉಳಿದು ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಬೇಳೂರು ಗೋಪಾಲಕೃಷ್ಣ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ತಿಳಿಸಿದರು.
ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ:
ಸಚಿವ ಸಂಪುಟ ವಿಸ್ತರಣೆಯಿಂದ ನನಗೆ ಬಹಳ ನೋವಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೆ, ಆದರೆ ಅದು ಈಡೇರಲಿಲ್ಲ. ಇದರಿಂದ ಕ್ಷೇತ್ರದ ಕಾರ್ಯಕರ್ತರು ಕೂಡ ಕಣ್ಣೀರಿಟ್ಟಿದ್ದಾರೆ. ಈ ನೋವಿನಿಂದ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ ಎಂದು ಹೇಳಿದರು.
ಆದರೆ, ನಿನ್ನೆ ರಾತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿ ಯಾವುದೇ ತುರ್ತು ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿದರು. ಅವರ ಮಾತಿಗೆ ಗೌರವ ನೀಡಿ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ನಿಲ್ಲುತ್ತೇನೆ:
ಮುಂದಿನ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ ಅಧಿಕಾರ ಸಿಗದಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ನಿಲ್ಲಲು ನಿರ್ಧರಿಸಿದ್ದೇನೆ ಎಂದರು.
ನನಗೆ ಕಾಂಗ್ರೆಸ್ನಿಂದ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಿದ್ದು ಡಿ.ಕೆ.ಶಿವಕುಮಾರ್. ಅವರ ಮೇಲಿನ ಗೌರವ ಹಾಗೂ ಪ್ರೀತಿಯಿಂದ ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಡುತ್ತಿದ್ದೇನೆ. ಇನ್ನು ಮುಂದೆ ಪಕ್ಷದ ಏಳಿಗೆಗಾಗಿ ಅವರೊಂದಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದು ಹೇಳಿದರು.
Also read: ಅಕ್ಷಯ ವಿಪ್ರ ಮಹಾಸಭಾದ 19ನೇ ವಾರ್ಷಿಕೋತ್ಸವ: ಸಾಧಕರಿಗೆ ಅಕ್ಷಯ ರತ್ನ ಪ್ರಶಸ್ತಿ, ಪ್ರತಿಭಾ ಪುರಸ್ಕಾರ
ಸಿದ್ದರಾಮಯ್ಯ ಅವರ ಬಳಿ ಸಚಿವ ಸ್ಥಾನ ಕೇಳಿದ್ದೆ:
ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿತ್ತು. ಎರಡುವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡುವ ಭರವಸೆ ಇತ್ತು. ಆದರೆ ಕೊನೆಗೆ ಅದು ನಿರಾಸೆಯಾಯಿತು. ಸಾಮಾನ್ಯ ವರ್ಗದಿಂದ ಬಂದ ನನಗೆ ಎಲ್ಲರನ್ನೂ ಭೇಟಿಯಾಗಿ ಮನವಿ ಮಾಡಲು ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಸಚಿವ ಸ್ಥಾನಕ್ಕಾಗಿ ಕೇಳಿದ್ದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.
ಕಾರ್ಯಕರ್ತರಿಗೆ ಮನವಿ:
ಯಾವುದೇ ಕಾರ್ಯಕರ್ತರು ರಾಜೀನಾಮೆ ನೀಡಬಾರದು. ಮುಖ್ಯಮಂತ್ರಿ ಹಾಗೂ ಪಕ್ಷದ ಹಿತಕ್ಕಾಗಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯೋಣ ಎಂದು ಅವರು ಕರೆ ನೀಡಿದರು.
ಕಳೆದ ಮೂರು ವರ್ಷಗಳಲ್ಲಿ ಯಾವುದೇ ವಿವಾದಕ್ಕೆ ಕಾರಣವಾಗಿಲ್ಲ. ಪಕ್ಷದೊಳಗೆ ಭಿನ್ನಮತ ಸೃಷ್ಟಿಸಿಲ್ಲ. ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಆದರೂ ಸಚಿವ ಸ್ಥಾನ ಸಿಗಲಿಲ್ಲ. ನಾಲ್ಕು ಬಾರಿ ಗೆದ್ದ ಶಾಸಕರಿಗೂ ಇಂತಹ ಪ್ರಶ್ನೆಗಳು ಎದುರಾಗುವುದು ಸಹಜ ಎಂದು ಹೇಳಿದರು.
ಸಾಮಾಜಿಕ ನ್ಯಾಯದ ಮಾತು ಹೇಳುವ ಪಕ್ಷದಲ್ಲಿ ಸಚಿವ ಸ್ಥಾನ ಹಂಚಿಕೆಯ ವೇಳೆ ಎಲ್ಲವೂ ಸರಿಯಾಗಿಲ್ಲ ಎಂಬ ಬೇಸರವಿದೆ. ಆದರೆ ಇದಕ್ಕಾಗಿ ಹೈಕಮಾಂಡ್ ಅಥವಾ ಯಾರನ್ನೂ ದೂರುವುದಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗಾಗಿ ಪಕ್ಷದಲ್ಲೇ ಉಳಿದು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








