ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ (Shivamogga) ಹಲವು ಖಾಸಗಿ ಆಸ್ಪತ್ರೆಗಳಲ್ಲಿ (Private Hospital) ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ರೋಗಿಗಳು, ಸಾರ್ವಜನಿಕರು ಹಾಗೂ ತುರ್ತು ಸೇವೆಗಳ ವಾಹನಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಒಂದು ವಾರದ ಗಡುವು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಸಂಘರ್ಷ ಸಮಿತಿ ಆಗ್ರಹಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯಾಧ್ಯಕ್ಷ ಹರೀಶ್, ನಗರದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆಯೇ ಇಲ್ಲ ಎಂದು ಆರೋಪಿಸಿದರು.
ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದುಕೊಂಡು ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಲು ಮುಂದಾದರೆ, ಸೆಕ್ಯುರಿಟಿ ಸಿಬ್ಬಂದಿ ವಾಹನ ನಿಲ್ಲಿಸದಂತೆ ತಡೆಯುತ್ತಾರೆ. ಮತ್ತೊಂದೆಡೆ, ರಸ್ತೆ ಬದಿಯಲ್ಲಿ ಅಥವಾ ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದರೆ ಪೊಲೀಸರು ದಂಡ ವಿಧಿಸುತ್ತಾರೆ. ಹೀಗಾಗಿ ರೋಗಿಗಳನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬರಬೇಕೋ ಅಥವಾ ವಾಹನವನ್ನು ಎಲ್ಲಿ ನಿಲ್ಲಿಸಬೇಕು ಎಂಬ ಆತಂಕದಲ್ಲೇ ಸಮಯ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಬೇಸ್ಮೆಂಟ್ ಪಾರ್ಕಿಂಗ್ಗೆ ಮೀಸಲಿಟ್ಟಿದ್ದರೂ ವ್ಯವಸ್ಥೆ ಇಲ್ಲ
ನಗರದ ಹಲವು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಕಟ್ಟಡ ನಿರ್ಮಾಣಕ್ಕೆ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯುವ ಸಂದರ್ಭದಲ್ಲಿ ತಮ್ಮ ಕಟ್ಟಡಗಳ ಬೇಸ್ಮೆಂಟ್ ಪ್ರದೇಶವನ್ನು ಪಾರ್ಕಿಂಗ್ಗಾಗಿ ಮೀಸಲಿಡುವುದಾಗಿ ಯೋಜನೆ ಸಲ್ಲಿಸಿದ್ದವು. ಆದರೆ ಪ್ರಸ್ತುತ ಹಲವು ಆಸ್ಪತ್ರೆಗಳ ಬೇಸ್ಮೆಂಟ್ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಕಂಡುಬರುತ್ತಿದೆ ಎಂದು ಸಮಿತಿ ಆರೋಪಿಸಿದೆ.
ಇದರಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವಂತಾಗಿದೆ. ಪರಿಣಾಮವಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವುದರ ಜೊತೆಗೆ ಸಾರ್ವಜನಿಕರ ಸಂಚಾರಕ್ಕೂ ತೊಂದರೆಯಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ವಾಹನಗಳು ಆಸ್ಪತ್ರೆಗಳನ್ನು ತಲುಪಲು ಹಾಗೂ ಹೊರಬರಲು ಸಮಸ್ಯೆಯಾಗುವ ಸಾಧ್ಯತೆಯೂ ಇದೆ ಎಂದು ಹರೀಶ್ ತಿಳಿಸಿದರು.
ಆಸ್ಪತ್ರೆಗಳ ಸುತ್ತಮುತ್ತ ವಾಹನಗಳ ಅಸಮರ್ಪಕ ನಿಲುಗಡೆಯಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಕೆಲ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಈ ಸಮಸ್ಯೆಯನ್ನು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.
ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ತಕ್ಷಣವೇ ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳ ಬೇಸ್ಮೆಂಟ್ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಬೇಕು. ಕಟ್ಟಡ ನಿರ್ಮಾಣ ಅನುಮತಿ ಪಡೆಯುವ ಸಂದರ್ಭದಲ್ಲಿ ನೀಡಿರುವ ಯೋಜನೆ ಹಾಗೂ ಪ್ರಸ್ತುತ ಇರುವ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸಿರುವ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.
Also read>> ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದ ಕಾರು ಪಲ್ಟಿ; 6 ಮಂದಿಗೆ ಗಾಯ
ಸಾರ್ವಜನಿಕರ ಅನುಕೂಲ ಹಾಗೂ ರೋಗಿಗಳ ಹಿತದೃಷ್ಟಿಯಿಂದ ಪ್ರತಿಯೊಂದು ಖಾಸಗಿ ಆಸ್ಪತ್ರೆಯಲ್ಲೂ ಅಗತ್ಯ ಪ್ರಮಾಣದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಸಂಬಂಧ ಒಂದು ವಾರದೊಳಗಾಗಿ ಕ್ರಮ ಕೈಗೊಂಡು, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ
ಮಹಾನಗರ ಪಾಲಿಕೆ ಅಧಿಕಾರಿಗಳು ಒಂದು ವಾರದ ಗಡುವಿನೊಳಗೆ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಹರೀಶ್ ಎಚ್ಚರಿಕೆ ನೀಡಿದರು.
ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







