ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೇಲ್ ಮೇಲೆ ಇರುವ ಸಚಿವ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸಂಸದ (B.Y. Raghavendra) ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ (Shivamogga) ಆಗ್ರಹಿಸಿದರು.
ನಗರದ ಡಿಸಿ ಕಚೇರಿ ಆವರಣದಲ್ಲಿ ಸಚಿವ ನಾಗೇಂದ್ರ ಅವರ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಈ ಹಿಂದೆ ಸಚಿವ ಸಂಪುಟದಿಂದ ಕೈಬಿಡಲಾಗಿತ್ತು. ಆದರೆ ಇದೀಗ ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಬಯಲು ಮಾಡಿದೆ ಎಂದು ಟೀಕಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಿಂದ ಹೆಚ್ಚುವರಿ ಹಣ ಸೇರಿಸಿ ರೈತರಿಗೆ ನೀಡಲಾಗುತ್ತಿದ್ದ ನೆರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದರು. ರೈತರ ಮಕ್ಕಳಿಗಾಗಿ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನೂ ಸಮರ್ಪಕವಾಗಿ ನೀಡುತ್ತಿಲ್ಲ.
-ಬಿ.ವೈ. ರಾಘವೇಂದ್ರ
ವಾಲ್ಮೀಕಿ ನಿಗಮದ ಹಣವನ್ನು ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳ ಕುರಿತು ತನಿಖಾ ಸಂಸ್ಥೆಗಳ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದ ರಾಘವೇಂದ್ರ, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಮೀಸಲಾದ ಅನುದಾನವನ್ನು ದುರ್ಬಳಕೆ ಮಾಡಿರುವ ಆರೋಪ ಗಂಭೀರವಾಗಿದ್ದು, ಸರ್ಕಾರ ಈ ಬಗ್ಗೆ ಜನತೆಗೆ ಸ್ಪಷ್ಟನೆ ನೀಡಬೇಕು ಎಂದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿದ ಅವರು, ಮತದಾರರಿಗೆ ಸುಳ್ಳು ಭರವಸೆ ಹಾಗೂ ಆಮಿಷಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರ ರೂಪಿಸಿದ್ದ ಯೋಜನೆಗಳನ್ನು ಮುಂದುವರಿಸುವುದನ್ನು ಹೊರತುಪಡಿಸಿ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.
Also read>> ಹರಿಪ್ರಸಾದ್ಗೆ ಈಶ್ವರಪ್ಪ ತಿರುಗೇಟು: ‘ಆರ್ಎಸ್ಎಸ್ ಬಗ್ಗೆ ಮೊದಲು ತಿಳಿದುಕೊಳ್ಳಿ’
ಶಕ್ತಿ ಯೋಜನೆಯಲ್ಲೂ ಸರ್ಕಾರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಟೀಕಿಸಿದ ರಾಘವೇಂದ್ರ, ಬಸ್ಗಳ ಸಂಖ್ಯೆಯನ್ನು ಹೆಚ್ಚಿಸದೆ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಾರಿಗೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.
ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲೂ ಸರ್ಕಾರದ ವಿರುದ್ಧ ಹಲವು ಆರೋಪಗಳಿವೆ ಎಂದು ಅವರು ಹೇಳಿದರು. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ವಿದ್ಯುತ್ ದರ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರದ ಆಡಳಿತದಲ್ಲಿ ಲೆಕ್ಕಪತ್ರಗಳಿಗಿಂತ ಜನರ ಸಮಸ್ಯೆಗಳು ಹೆಚ್ಚಾಗಿವೆ ಎಂದು ವ್ಯಂಗ್ಯವಾಡಿದರು.
Shivamogga ರೈತರು, ವಿದ್ಯಾರ್ಥಿಗಳ ಯೋಜನೆ ಸ್ಥಗಿತ ಆರೋಪ
ಕೇಂದ್ರ ಸರ್ಕಾರದ ಯೋಜನೆಗಳನ್ನು ಉಲ್ಲೇಖಿಸಿದ ರಾಘವೇಂದ್ರ, ಜಿಲ್ಲೆಗೆ ಕೇಂದ್ರದಿಂದ ಬ್ಯಾಟರಿ ಚಾಲಿತ 50 ಬಸ್ಗಳು ಬಂದಿವೆ. ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೆರವು ನೀಡಲಾಗುತ್ತಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಿಂದ ಹೆಚ್ಚುವರಿ ಹಣ ಸೇರಿಸಿ ರೈತರಿಗೆ ನೀಡಲಾಗುತ್ತಿದ್ದ ನೆರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದರು. ರೈತರ ಮಕ್ಕಳಿಗಾಗಿ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನೂ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.
-ರಾಘವೇಂದ್ರ
ವಾಲ್ಮೀಕಿ ಸಮುದಾಯದ ಬೇರೆ ಯಾರಿಗಾದರೂ ಸಚಿವ ಸ್ಥಾನ ನೀಡಲಿ. ಆದರೆ ನಾಗೇಂದ್ರ ಅವರನ್ನು ಸಚಿವರಾಗಿ ಮುಂದುವರಿಸಿದರೆ ಬಿಜೆಪಿ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ರಾಘವೇಂದ್ರ ಎಚ್ಚರಿಸಿದರು.
ಕೇಂದ್ರದ ಯೋಜನೆಗಳ ಬಗ್ಗೆ ಪ್ರಸ್ತಾಪ
ದೇಶಾದ್ಯಂತ ಅಡುಗೆ ಅನಿಲ ಸಂಪರ್ಕ, ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರು, ಶೌಚಾಲಯಗಳ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದೆ ಎಂದು ರಾಘವೇಂದ್ರ ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ನೀಡುವ ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಕೊಡುಗೆಯೂ ಇದೆ ಎಂದು ತಿಳಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಸಮುದಾಯ ಭವನಗಳು, ದೇವಸ್ಥಾನಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗುತ್ತಿದ್ದ ಅನುದಾನವನ್ನು ಪ್ರಸ್ತುತ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಆರೋಪಿಸಿದರು.
ನೀಟ್, ಇವಿಎಂ ವಿಚಾರದಲ್ಲೂ ಕಾಂಗ್ರೆಸ್ ವಿರುದ್ಧ ಟೀಕೆ
ನೀಟ್ ಪರೀಕ್ಷೆಯಿಂದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶಗಳು ದೊರೆಯುತ್ತಿವೆ ಎಂದು ರಾಘವೇಂದ್ರ ಹೇಳಿದರು. ಆನ್ಲೈನ್ ಯುಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ನಡೆಯುವ ಸಾಧ್ಯತೆಗಳಿದ್ದರೂ, ಸಮಸ್ಯೆ ಎದುರಾದ ಸಂದರ್ಭದಲ್ಲಿ ಮರು ಪರೀಕ್ಷೆ ನಡೆಸಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದರು.
ಸಂಸತ್ ಅಧಿವೇಶನದ ವೇಳೆ ಕಾಂಗ್ರೆಸ್ ಅನಗತ್ಯ ಪ್ರತಿಭಟನೆ ನಡೆಸಿ ಸಾರ್ವಜನಿಕರ ಹಣ ವ್ಯರ್ಥ ಮಾಡಿದೆ ಎಂದು ಆರೋಪಿಸಿದರು. ಎಸ್ಐಆರ್ ಹಾಗೂ ಇವಿಎಂ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ಕೆಲವು ರಾಜ್ಯಗಳಲ್ಲಿ ಇದೇ ವಿಚಾರಗಳ ಬಗ್ಗೆ ಕಾಂಗ್ರೆಸ್ ಬೇರೆ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯದ ಹಳ್ಳಿ ಹಳ್ಳಿಗೆ ತೆರಳಿ ಜನರಿಗೆ ವಾಸ್ತವಾಂಶ ತಿಳಿಸುವ ಕಾರ್ಯ ನಡೆಸಲಿದ್ದಾರೆ ಎಂದು ರಾಘವೇಂದ್ರ ಘೋಷಿಸಿದರು.
ಶಿಕಾರಿಪುರ ಬಂದ್ಗೆ ಬಿಜೆಪಿ ಬೆಂಬಲ
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಘವೇಂದ್ರ ಆರೋಪಿಸಿದರು. ಕೊಲೆ, ಸುಲಿಗೆ ಹಾಗೂ ದರೋಡೆ ಪ್ರಕರಣಗಳು ಹೆಚ್ಚಾಗಿವೆ. ಗೋಹತ್ಯೆ ಪ್ರಕರಣಗಳೂ ಮುಂದುವರಿದಿದ್ದು, ತಡೆಯಲು ಮುಂದಾದ ಯುವಕರ ಮೇಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಇತ್ತೀಚೆಗೆ ಹಲವು ಬಾರಿ ಹಲ್ಲೆ ನಡೆದಿದೆ ಎಂದು ಹೇಳಿದರು.
ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಾಕ್ಷ್ಯಾಧಾರಗಳೊಂದಿಗೆ ಮಾಹಿತಿ ನೀಡಿದ್ದರೂ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ನಡೆಯಲಿರುವ ಶಿಕಾರಿಪುರ ಬಂದ್ಗೆ ಬಿಜೆಪಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಗುರುಮೂರ್ತಿ, ಹನುಮಂತಪ್ಪ, ಮಾಲತೇಶ್, ಹರೀಶ್, ಗಿರೀಶ್, ರಾಮನಾಯ್ಕ್, ಮೂರ್ತಿ, ಸುರೇಖಾ ಮುರಳೀಧರ್, ಶಾಂತಾ ಸುರೇಂದ್ರ, ವೀರಭದ್ರಪ್ಪ ಪೂಜಾರ್, ಸುಮಾ ಭೂಪಾಳಂ, ಮಂಗಳಾ ನಾಗೇಂದ್ರ, ಚಂದ್ರಶೇಖರ್ ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


Comments 2