ಕಲ್ಪ ಮೀಡಿಯಾ ಹೌಸ್ | ಬ್ರಹ್ಮಾವರ |
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಪುತ್ರನೊಬ್ಬ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಸುತ್ತಿಗೆಯಿಂದ ಹೊಡೆದು (Murder) ಹತ್ಯೆಗೈದಿರುವ ಭೀಕರ ಘಟನೆ (Udupi) ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ ಶಾಹಿದ್ ಅಲಿ (31) ಎಂಬಾತನನ್ನು ಬ್ರಹ್ಮಾವರ (Brahmavara) ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಗಾಂಧಿನಗರ ನಿವಾಸಿಗಳಾದ ಮಹಮ್ಮದ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (51) ಮೃತಪಟ್ಟಿದ್ದಾರೆ. ಕುಟುಂಬದೊಳಗಿನ ಜಗಳವೇ ದುರಂತಕ್ಕೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಯ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚುತ್ತಿದ್ದಾರೆ.
ಮನೆಯಲ್ಲೇ ವಾಸವಾಗಿದ್ದ ಕುಟುಂಬ
ಮಹಮ್ಮದ್ ಅಲಿ ಅವರ ಕುಟುಂಬ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ಸುಮಾರು 5 ಸೆಂಟ್ಸ್ ಜಾಗದಲ್ಲಿ ನಿರ್ಮಿಸಿದ್ದ ಮನೆಯಲ್ಲಿ ವಾಸವಾಗಿತ್ತು. ಮಹಮ್ಮದ್ ಅಲಿ ಅವರು ಮಲ್ಪೆಯಲ್ಲಿ ಮೀನು ಸಾಗಾಟದ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸಂಶದ್ ಬೇಗಂ ಗೃಹಿಣಿಯಾಗಿದ್ದರು.
ದಂಪತಿಗೆ ಓರ್ವ ಪುತ್ರಿ ಹಾಗೂ ಓರ್ವ ಪುತ್ರನಿದ್ದು, ಪುತ್ರಿ ವಿವಾಹವಾಗಿ ಗಂಡನ ಮನೆಯಲ್ಲಿದ್ದಾರೆ. ಪುತ್ರ ಶಾಹಿದ್ ಅಲಿ ಮನೆಯಲ್ಲೇ ವಾಸವಾಗಿದ್ದ ಎನ್ನಲಾಗಿದೆ.
Udupi : ಜುಮೆಟೋ ಡೆಲಿವರಿ ಕೆಲಸ ಮಾಡುತ್ತಿದ್ದ ಆರೋಪಿ
ಶಾಹಿದ್ ಅಲಿ ಜುಮೆಟೋ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆತ ಕೆಲಸಕ್ಕೆ ಸರಿಯಾಗಿ ತೆರಳದೆ ಮನೆಯಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದ ಎನ್ನಲಾಗಿದೆ.
Also read>> ಹುಬ್ಬಳ್ಳಿ – ರಾಮೇಶ್ವರಂ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಮತ್ತೊಂದು ಗುಡ್ ನ್ಯೂಸ್
ಈ ನಡುವೆ ತಂದೆ ಮತ್ತು ತಾಯಿ ತನ್ನ ಮೇಲೆ ನಿರಂತರವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಶಾಹಿದ್ ಅಲಿ ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾನೆ ಎನ್ನಲಾಗಿದೆ. ಆದರೆ ಈ ಆರೋಪದ ಸತ್ಯಾಸತ್ಯತೆ ಹಾಗೂ ಕೊಲೆಗೆ ಅದೇ ಕಾರಣವೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಜಗಳ, ಬಳಿಕ ಮಾರಣಾಂತಿಕ ಹಲ್ಲೆ
ಭಾನುವಾರ ರಾತ್ರಿ ಮನೆಯಲ್ಲಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಶಾಹಿದ್ ಅಲಿ ಹಾಗೂ ತಂದೆ ಮಹಮ್ಮದ್ ಅಲಿ ನಡುವೆ ಜಗಳ ಆರಂಭವಾಗಿದೆ ಎನ್ನಲಾಗಿದೆ. ಜಗಳ ತೀವ್ರಗೊಂಡ ಸಂದರ್ಭದಲ್ಲಿ ಶಾಹಿದ್ ಅಲಿ ಏಕಾಏಕಿ ಸುತ್ತಿಗೆಯಿಂದ ತಂದೆಯ ತಲೆಗೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ತಾಯಿಯ ಮೇಲೂ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಆರೋಪಿ ಮನೆಯಲ್ಲೇ ಇದ್ದ ಎನ್ನಲಾಗಿದ್ದು, ಸೋಮವಾರ ಬೆಳಗ್ಗೆ ಸುಮಾರು 9 ಗಂಟೆಗೆ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ
112 ಸಹಾಯವಾಣಿಗೆ ಮಾಹಿತಿ ಬಂದ ತಕ್ಷಣ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಆರೋಪಿ ಶಾಹಿದ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರಿರಾಂ ಶಂಕರ್, ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಯೊಳಗಿನ ಪರಿಸ್ಥಿತಿ, ಮೃತದೇಹಗಳಿದ್ದ ಸ್ಥಳ ಹಾಗೂ ಕೃತ್ಯಕ್ಕೆ ಸಂಬಂಧಿಸಿದ ಇತರ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ
ಮೃತ ಮಹಮ್ಮದ್ ಅಲಿ ಹಾಗೂ ಸಂಶದ್ ಬೇಗಂ ಅವರ ಮೃತದೇಹಗಳನ್ನು ಮಣಿಪಾಲಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ಸ್ವರೂಪಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಘಟನಾ ಸ್ಥಳದಲ್ಲಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಕೊಲೆಗೆ ಬಳಸಲಾದ ಆಯುಧ, ದಾಳಿಯ ನಿಖರ ಕಾರಣ, ಕುಟುಂಬದೊಳಗಿನ ಹಿಂದಿನ ಮನಸ್ತಾಪ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ತನಿಖೆ ಮುಂದುವರಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆಯ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








