ಕಲ್ಪ ಮೀಡಿಯಾ ಹೌಸ್ | ತುಮಕೂರು |
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಅವರು ತುಮಕೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ನೈಋತ್ಯ ರೈಲ್ವೆ (SWR) ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿ ನಡೆಯುತ್ತಿರುವ ನಿಲ್ದಾಣ ಪುನರಾಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿಯ ಪ್ರಗತಿ, ಪ್ರಯಾಣಿಕರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ನಿರ್ಮಾಣದ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
₹85.8 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣ ಪುನರಾಭಿವೃದ್ಧಿ
ತುಮಕೂರು ರೈಲು ನಿಲ್ದಾಣವನ್ನು ಅಂದಾಜು ₹85.8 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಪಡಿಸಲಾಗುತ್ತಿದೆ. ಯೋಜನೆಯಡಿ ಪ್ರಯಾಣಿಕರ ಅಗತ್ಯಗಳಿಗೆ ಅನುಗುಣವಾಗಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಹೊಸ ಜಿ+4 ಮಾದರಿಯ ನಿಲ್ದಾಣ ಕಟ್ಟಡ ನಿರ್ಮಿಸಲಾಗುತ್ತಿದೆ.
ಇದರ ಜೊತೆಗೆ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ, ಹೊಸ ಪ್ಲಾಟ್ಫಾರ್ಮ್ ಛಾವಣಿಗಳು ಸೇರಿದಂತೆ ವಿವಿಧ ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ನಿಲ್ದಾಣ ಪುನರಾಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಗುಣಮಟ್ಟದ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕಾಮಗಾರಿಗಳನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೂರು ಲೆವೆಲ್ ಕ್ರಾಸಿಂಗ್ಗಳಿಗೆ ರಸ್ತೆ ಮೇಲ್ಸೇತುವೆ
ಬಳಿಕ ಸಚಿವರು ತುಮಕೂರು ನಗರ ವ್ಯಾಪ್ತಿಯ ವಿವಿಧ ಲೆವೆಲ್ ಕ್ರಾಸಿಂಗ್ಗಳ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗಳನ್ನು ಪರಿಶೀಲಿಸಿದರು.
ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 39 (ಬಟವಾಡಿ ಗೇಟ್), ಎಲ್ಸಿ ಸಂಖ್ಯೆ 38 (ಬಡ್ಡಿಹಳ್ಳಿ ಗೇಟ್) ಹಾಗೂ ಎಲ್ಸಿ ಸಂಖ್ಯೆ 35 (ಮೈದಾಳ ಗೇಟ್) ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆಗಳ ಕಾಮಗಾರಿಗಳ ಪ್ರಗತಿಯನ್ನು ಅವರು ಅವಲೋಕಿಸಿದರು.
Also Read>> ಯಶವಂತಪುರ–ವಿಜಯಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್
ಈ ಕಾಮಗಾರಿಗಳನ್ನು ಡಿಸೆಂಬರ್ 2026ರ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವ ಮೂಲಕ ರೈಲು ಸಂಚಾರ ಮತ್ತು ರಸ್ತೆ ಸಂಚಾರದಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆಗಳನ್ನು ಕಡಿಮೆ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು–ಚಿತ್ರದುರ್ಗ–ದಾವಣಗೆರೆ ಹೊಸ ರೈಲು ಮಾರ್ಗ ಪರಿಶೀಲನೆ
ನಂತರ ಸಚಿವ ವಿ. ಸೋಮಣ್ಣ ಅವರು ತುಮಕೂರು–ಚಿತ್ರದುರ್ಗ–ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯಡಿ ಪ್ರಸ್ತಾವಿತ ಜೋಗಿಹಳ್ಳಿ ಹಾಗೂ ಚಿಕ್ಕನಹಳ್ಳಿ ರೈಲ್ವೆ ನಿಲ್ದಾಣಗಳ ಸ್ಥಳಗಳನ್ನು ಪರಿಶೀಲಿಸಿದರು.
ಈ ಹೊಸ ರೈಲು ಮಾರ್ಗ ಯೋಜನೆಯಡಿ ತಿಮ್ಮರಾಜನಹಳ್ಳಿ–ತಾವರೆಕೆರೆ ನಡುವಿನ 41 ಕಿ.ಮೀ. ಉದ್ದದ ಹೊಸ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯನ್ನು ಮಾರ್ಚ್ 2028ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಯೋಜನೆ ಪೂರ್ಣಗೊಂಡ ಬಳಿಕ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಭಾಗಗಳ ರೈಲು ಸಂಪರ್ಕ ಮತ್ತಷ್ಟು ಸುಧಾರಿಸುವ ನಿರೀಕ್ಷೆಯಿದ್ದು, ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಜೋಗಿಹಳ್ಳಿ, ಚಿಕ್ಕನಹಳ್ಳಿಯಲ್ಲಿ ಹೊಸ ರೈಲು ನಿಲ್ದಾಣ
ತುಮಕೂರು–ಚಿತ್ರದುರ್ಗ–ದಾವಣಗೆರೆ ಹೊಸ ರೈಲು ಮಾರ್ಗದ ಯೋಜನೆಯಡಿ ಜೋಗಿಹಳ್ಳಿ, ಚಿಕ್ಕನಹಳ್ಳಿ, ಶಿರಾ ಹಾಗೂ ತಾವರೆಕೆರೆಗಳಲ್ಲಿ ಹೊಸ ರೈಲ್ವೆ ನಿಲ್ದಾಣ ಕಟ್ಟಡಗಳನ್ನು ನಿರ್ಮಿಸಲಾಗುವುದು.
ಜೋಗಿಹಳ್ಳಿ ಮತ್ತು ಚಿಕ್ಕನಹಳ್ಳಿ ರೈಲ್ವೆ ನಿಲ್ದಾಣಗಳಲ್ಲಿ ತಲಾ ಎರಡು ಪ್ಲಾಟ್ಫಾರ್ಮ್ಗಳು ನಿರ್ಮಿಸುವುದರ ಜೊತೆಗೆ ಪ್ರಯಾಣಿಕರಿಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಯೋಜಿಸಲಾಗಿದೆ.
ಪ್ರಸ್ತಾವಿತ ನಿಲ್ದಾಣಗಳ ಸ್ಥಳ ಪರಿಶೀಲನೆ ನಡೆಸಿದ ಸಚಿವರು, ಕಾಮಗಾರಿಯ ಯೋಜನೆ ಹಾಗೂ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
SWR : ಸಾರ್ವಜನಿಕರ ಅನುಕೂಲಕ್ಕೆ ಆದ್ಯತೆ
ರೈಲ್ವೆ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಬೇಕು. ಕಾಮಗಾರಿಗಳ ಸಂದರ್ಭದಲ್ಲಿ ಗುಣಮಟ್ಟ, ಸುರಕ್ಷತೆ ಹಾಗೂ ನಿಗದಿತ ಕಾಲಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ತುಮಕೂರು ರೈಲು ನಿಲ್ದಾಣ ಮತ್ತು ರಸ್ತೆ ಮೇಲ್ಸೇತುವೆ ಕಾಮಗಾರಿಗಳ ಪರಿಶೀಲನೆಯ ಸಂದರ್ಭದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಹಾಗೂ ಬಿ. ಸುರೇಶ್ ಗೌಡ ಉಪಸ್ಥಿತರಿದ್ದರು. ಜೋಗಿಹಳ್ಳಿ ಮತ್ತು ಚಿಕ್ಕನಹಳ್ಳಿ ರೈಲ್ವೆ ಕಾಮಗಾರಿಗಳ ಪರಿಶೀಲನೆ ವೇಳೆ ಶಿರಾ ಶಾಸಕ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್ (ನಿರ್ಮಾಣ) ಅಶುತೋಷ್ ಮಾಥುರ್, ಪ್ರದೀಪ್ ಪುರಿ, ಬೆಂಗಳೂರಿನ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







