ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಧಿಕಾರಶಾಹಿ ಹಾಗೂ ಭ್ರಷ್ಟ ವ್ಯವಸ್ಥೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಯುವ ಸಮೂಹದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಶಿವಮೊಗ್ಗದ (Shivamogga) ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ (JNNCE) ಹೇಳಿದರು.
ನಗರದ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ವಿವಿಧ ಇಂಜಿನಿಯರಿಂಗ್ ವಿಭಾಗಗಳಿಗೆ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಅಭಿವಿನ್ಯಾಸ’ (ಓರಿಯಂಟೇಷನ್) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಶಕ್ತಿ ಗಾಂಧೀ ಮಾರ್ಗದ ಮೂಲಕ ನಡೆಸುತ್ತಿರುವ ಹೋರಾಟಗಳು ಸರ್ಕಾರಗಳನ್ನು ಎಚ್ಚರಿಸುವುದರ ಜೊತೆಗೆ ವ್ಯವಸ್ಥೆಯನ್ನು ಅಲುಗಾಡಿಸುವಲ್ಲಿ ಯಶಸ್ವಿಯಾಗಿವೆ. ಮಹಾಭಾರತ ಮತ್ತು ರಾಮಾಯಣಗಳು ಎಲ್ಲಿಯವರೆಗೆ ಪ್ರಸ್ತುತವಾಗಿರುತ್ತವೆಯೋ, ಅಲ್ಲಿಯವರೆಗೆ ಗಾಂಧೀ ಮಾರ್ಗವೂ ಪ್ರಸ್ತುತವಾಗಿರುತ್ತದೆ ಎಂದು ಅವರು ಹೇಳಿದರು.
ಪಾರದರ್ಶಕತೆ, ಪ್ರಾಮಾಣಿಕತೆಗೆ ಆದ್ಯತೆ ನೀಡಿ
ಶಿಕ್ಷಣ ಪಡೆದವರಿಂದಲೇ ವ್ಯವಸ್ಥೆಗೆ ಸವಾಲುಗಳು ಎದುರಾಗುತ್ತಿರುವುದು ವಿಷಾದನೀಯ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತವೆ. ಹೀಗಾಗಿ ಯುವಕರು ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಜೀವನದ ಪ್ರಮುಖ ಮೌಲ್ಯಗಳನ್ನಾಗಿ ಅಳವಡಿಸಿಕೊಳ್ಳಬೇಕು ಎಂದು ಜಿ.ಎಸ್. ನಾರಾಯಣ ರಾವ್ ಹೇಳಿದರು.
ವಿದ್ಯಾರ್ಥಿಗಳು ಕೇವಲ ಸುಶಿಕ್ಷಿತರಾಗುವುದಷ್ಟೇ ಅಲ್ಲದೆ ಸುಸಂಸ್ಕೃತರಾಗಬೇಕು. ಪೋಷಕರ ಆಶಯಗಳನ್ನು ಗೌರವಿಸುವುದರ ಜೊತೆಗೆ ಜ್ಞಾನಕ್ಕಿಂತಲೂ ಮಿಗಿಲಾದ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿ ಸಮಾಜಕ್ಕೆ ಬೆಳಕಾಗಬೇಕು ಎಂದು ಕಿವಿಮಾತು ಹೇಳಿದರು.
ಪ್ರಯೋಗ, ಸಂಶೋಧನೆ ಮತ್ತು ಆವಿಷ್ಕಾರಕ್ಕೆ ಒತ್ತು
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ದೂರದೃಷ್ಟಿಯ ಫಲವಾಗಿ ಸ್ಥಾಪನೆಯಾದ ರಾಷ್ಟ್ರೀಯ ಶಿಕ್ಷಣ ಸಮಿತಿ, ಇಂದಿಗೂ ಅದೇ ಧ್ಯೇಯೋದ್ದೇಶಗಳೊಂದಿಗೆ ಸಮಾಜದ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿದೆ ಎಂದು ಹೇಳಿದರು.
ಸಮಾಜದ ಅಗತ್ಯಗಳನ್ನು ಅರಿತು ಹಿರಿಯರು ಕಾಲಕಾಲಕ್ಕೆ ವಿವಿಧ ವಿಷಯಗಳನ್ನು ಒಳಗೊಂಡ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿರುವುದು ಸಂಸ್ಥೆಯ ವಿಶೇಷತೆ ಎಂದರು.
ಶಿಕ್ಷಣವು ಕೇವಲ ತರಗತಿ ಕೊಠಡಿಯ ಕಲಿಕೆಗೆ ಸೀಮಿತವಾಗಬಾರದು. ಪ್ರಯೋಗ, ಸಂಶೋಧನೆ ಹಾಗೂ ಆವಿಷ್ಕಾರದ ಮೂಲಕ ವಿದ್ಯಾರ್ಥಿಗಳ ಕಲಿಕೆ ವಿಸ್ತರಿಸಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಯೋಗಾಲಯದ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿ, ಆವಿಷ್ಕಾರಿ ಮನೋಭಾವದೊಂದಿಗೆ ಕಲಿಯುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಂಕಗಳಿಗಿಂತ ಜ್ಞಾನ ಮತ್ತು ಕೌಶಲ್ಯ ಮುಖ್ಯ
ವಿದ್ಯಾರ್ಥಿಗಳ ಕಲ್ಪನೆಗಳಿಗೆ ಉತ್ಪನ್ನದ ರೂಪ ನೀಡಲು ಕಾಲೇಜಿನಲ್ಲಿ ಐಡಿಯಾ ಲ್ಯಾಬ್ನಂತಹ ನಾವೀನ್ಯ ಉತ್ಪನ್ನ ನಿರ್ಮಾಣ ವೇದಿಕೆಗಳನ್ನು ರೂಪಿಸಲಾಗಿದೆ. ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಎಸ್.ಎನ್. ನಾಗರಾಜ್ ಹೇಳಿದರು.
ಅಂಕಗಳಿಗಿಂತ ಜ್ಞಾನ, ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಲಿದೆ ಎಂದರು.
ಮುಂದಿನ ದಿನಗಳಲ್ಲಿ ಸ್ಟಾರ್ಟ್ಅಪ್ಗಳ ನಿರ್ಮಾಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಗೆ ಇಂಜಿನಿಯರಿಂಗ್ ಶಿಕ್ಷಣವು ಭದ್ರ ಬುನಾದಿಯಾಗಬೇಕು ಎಂದು ಆಶಿಸಿದರು.
Also read>> ಪಿಇಎಸ್ ಐಎಎಮ್ಎಸ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳಿಗೆ ‘ನಿಪುಣ ಕರ್ನಾಟಕ’ ಪ್ರಮಾಣಪತ್ರ ಕೋರ್ಸ್
Shivamogga : ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ
ಜೆಎನ್ಎನ್ಸಿಇ ಕಾಲೇಜಿಗೆ ಹೊಸ ಹೆಜ್ಜೆಯಿಟ್ಟ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಅಂತಿಮ ವರ್ಷದ ಎಐ ವಿದ್ಯಾರ್ಥಿಗಳು ನಿರ್ಮಿಸಿದ ರೋಬೋ ಆತ್ಮೀಯವಾಗಿ ಸ್ವಾಗತಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.
ಇದರೊಂದಿಗೆ ವಿವಿಧ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ನಾವೀನ್ಯಮಯ ಯೋಜನೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಪ್ರದರ್ಶನದಲ್ಲಿ ಕೈ ಸನ್ನೆಗಳ ಮೂಲಕ ಬ್ಲೂಟೂತ್ ಬಳಸಿ ನಿಯಂತ್ರಿಸಬಹುದಾದ ರೊಬೊಟಿಕ್ ಆರ್ಮ್, ದೃಷ್ಟಿಹೀನರು ಹಾಗೂ ಸವಾರರಿಗೆ ನೈಜ ಸಮಯದಲ್ಲಿ ವಸ್ತು ಪತ್ತೆ ಮತ್ತು ಧ್ವನಿ ಮಾರ್ಗದರ್ಶನ ನೀಡುವ ಎಐ ಸ್ಮಾರ್ಟ್ ಹೆಲ್ಮೆಟ್, ತಂತ್ರಜ್ಞಾನದ ನೆರವಿನಿಂದ ಪ್ರಜ್ವಲಿಸಿದ ದೀಪಸ್ತಂಭ ಹಾಗೂ ಜೈವಿಕ ಇಂಧನಕ್ಕೆ ಸಂಬಂಧಿಸಿದ ಪ್ರಯೋಗಗಳು ವಿಶೇಷ ಗಮನ ಸೆಳೆದವು.
ಕಾರ್ಯಕ್ರಮದ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ
ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಎನ್ಇಎಸ್ ಖಜಾಂಚಿ ಡಿ.ಜಿ. ರಮೇಶ್, ನಿರ್ದೇಶಕರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಎಂ.ಎಸ್. ಅನಂತದತ್ತಾ, ಎಂ.ಆರ್. ಸೀತಾಲಕ್ಷ್ಮೀ, ಜಿ.ಎನ್. ಸುಧೀರ್ ಹಾಗೂ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಸಂಶೋಧನಾ ಡೀನ್ ಡಾ. ಎಸ್.ವಿ. ಸತ್ಯನಾರಾಯಣ ಸ್ವಾಗತಿಸಿದರು. ಪ್ರವೇಶಾತಿ ಸಮಿತಿ ಮುಖ್ಯಸ್ಥ ಡಾ. ಮೊಯಿನುದ್ದಿನ್ ಖಾನ್ ವಂದಿಸಿದರು. ಡಾ. ಎಚ್.ಬಿ. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ವಾತಾವರಣ, ನಾವೀನ್ಯತೆ, ಸಂಶೋಧನೆ ಮತ್ತು ವೃತ್ತಿಪರ ಶಿಕ್ಷಣದ ಮಹತ್ವವನ್ನು ಪರಿಚಯಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅರಿವು ಮೂಡಿಸುವಲ್ಲಿ ‘ಅಭಿವಿನ್ಯಾಸ’ ಕಾರ್ಯಕ್ರಮ ಪ್ರಮುಖ ವೇದಿಕೆಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








