ಕಲ್ಪ ಮೀಡಿಯಾ ಹೌಸ್ | ಸಾಗರ (ಶಿವಮೊಗ್ಗ) | ವರದಿ: ಮಧುರಾಮ್ |
ಸಾಗರ (Sagar) ತಾಲೂಕಿನ ಹಿರೆಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡಗೋಡು ಗ್ರಾಮದ ಸರ್ವೆ ನಂ. 62ರಲ್ಲಿ ಸುಮಾರು ಮೂರು ಎಕರೆ ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ, ಅರಣ್ಯ ನಾಶಪಡಿಸಿ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ನಡೆಸುತ್ತಿದ್ದ ಪ್ರಯತ್ನವನ್ನು ಸ್ಥಳೀಯ ಗ್ರಾಮಸ್ಥರ ಮಾಹಿತಿ ಮೇರೆಗೆ ಕಂದಾಯ ಹಾಗೂ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ತಡೆದಿದ್ದಾರೆ.
ನಾಡಗೋಡು ಗ್ರಾಮದ ಸರ್ವೆ ನಂ. 62ರಲ್ಲಿ ಅರಣ್ಯ ಪ್ರದೇಶವನ್ನು (Forest area) ಅತಿಕ್ರಮಿಸಿ ಮರಗಳನ್ನು ಕಡಿದು ಜಾಗವನ್ನು ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು ಕೂಡಲೇ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ತಹಸೀಲ್ದಾರ್ ಡಾ. ಪ್ರತೀಬಾ. ಆರ್. ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Also Read>> ಯಲಹಂಕದಲ್ಲಿ ಸಡಗರದ ರಕ್ಷಾಬಂಧನ ಆಚರಣೆ | ಬಾಂಧವ್ಯದ ಮಹತ್ವ ಸಾರಿದ ಸುರೇಶ್ ಋಗ್ವೇದಿ
ಸ್ಥಳ ಪರಿಶೀಲನೆಯ ಬಳಿಕ ಅರಣ್ಯ ಪ್ರದೇಶದಲ್ಲಿ ನಡೆದಿದ್ದ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು. ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗದಂತೆ ಅತಿಕ್ರಮಣಕಾರರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
ಸರ್ಕಾರಿ ಹಾಗೂ ಅರಣ್ಯ ಭೂಮಿಯನ್ನು ಯಾವುದೇ ರೀತಿಯಲ್ಲಿ ಒತ್ತುವರಿ ಮಾಡಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸೂಚಿಸಿದರು.
Sagar : ಗ್ರಾಮಸ್ಥರಿಂದ ಅರಣ್ಯ ರಕ್ಷಣೆಗೆ ನಿರಂತರ ಹೋರಾಟ
ನಾಡಗೋಡು ಪ್ರದೇಶದಲ್ಲಿ ಈ ರೀತಿಯ ಅರಣ್ಯ ಒತ್ತುವರಿ ಪ್ರಯತ್ನ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಎರಡು ಬಾರಿ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳುವ ಪ್ರಯತ್ನ ನಡೆದಿದ್ದು, ಸ್ಥಳೀಯ ಗ್ರಾಮಸ್ಥರು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಿ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ಅತಿಕ್ರಮಣ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅರಣ್ಯ ಪ್ರದೇಶವನ್ನು ಉಳಿಸಿಕೊಳ್ಳಲು ಗ್ರಾಮಸ್ಥರು ನಿರಂತರವಾಗಿ ಜಾಗೃತಿ ವಹಿಸುತ್ತಿದ್ದು, ಹೊಸದಾಗಿ ನಡೆಯುವ ಅತಿಕ್ರಮಣಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡುತ್ತಿದ್ದಾರೆ. ಗ್ರಾಮಸ್ಥರ ಈ ಪ್ರಯತ್ನದಿಂದಾಗಿ ಹಲವು ಸಂದರ್ಭಗಳಲ್ಲಿ ಅರಣ್ಯ ಪ್ರದೇಶವನ್ನು ರಕ್ಷಿಸಲು ಸಾಧ್ಯವಾಗಿದೆ.
ಈಶ್ವರ ಖಂಡ್ರೆ ಅವರ ಗಮನಕ್ಕೂ ತಂದಿದ್ದ ವಿಚಾರ
ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಅರಣ್ಯ ಒತ್ತುವರಿ ಹಾಗೂ ಅರಣ್ಯ ನಾಶದ ವಿಚಾರವನ್ನು ಹಿಂದಿನ ಅರಣ್ಯ ಸಚಿವರಾದ ಈಶ್ವರ ಖಂಡ್ರೆ (Eshwar Khandre) ಅವರ ಗಮನಕ್ಕೂ ತರಲಾಗಿತ್ತು. ಈ ಸಂದರ್ಭದಲ್ಲಿ ಅವರು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎಂದು ತಿಳಿಸಲಾಗಿದೆ.
ಆದಾಗ್ಯೂ, ಸಾಗರ ತಾಲೂಕಿನಲ್ಲಿ ಪದೇಪದೇ ಅರಣ್ಯ ಪ್ರದೇಶದ ಮೇಲೆ ಅತಿಕ್ರಮಣ ನಡೆಸುವ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅರಣ್ಯ ಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ನಿಗಾ ವಹಿಸಿ, ಹೊಸ ಅತಿಕ್ರಮಣಗಳಿಗೆ ಯಾವುದೇ ಅವಕಾಶ ನೀಡದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
ರಾಜಕೀಯ ಪಕ್ಷಗಳು ಅರಣ್ಯ ಸಂರಕ್ಷಣೆಗೆ ಬೆಂಬಲ ನೀಡಲಿ
ಅರಣ್ಯ ಪ್ರದೇಶದ ಅತಿಕ್ರಮಣಕ್ಕೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ರಾಜಕೀಯವಾಗಿ ಪ್ರಭಾವ ಹೊಂದಿರುವವರು ಬೆಂಬಲ ನೀಡಬಾರದು. ಅರಣ್ಯ ಮತ್ತು ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ರಾಜಕೀಯ ಭೇದಭಾವ ಮರೆತು ಅರಣ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ವೃಕ್ಷ ಲಕ್ಷ ಆಂದೋಲನ ಕರ್ನಾಟಕದ ಸಂಚಾಲಕ ಕವಲಕೋಡು ವೆಂಕಟೇಶ್ ಕೆ. ಮನವಿ ಮಾಡಿದ್ದಾರೆ.
ಸಾಗರ ತಾಲೂಕಿನ ವಿವಿಧ ಭಾಗಗಳಲ್ಲಿ ಅರಣ್ಯ ಪ್ರದೇಶಗಳ ಮೇಲೆ ನಡೆಯುತ್ತಿರುವ ಹೊಸ ಅತಿಕ್ರಮಣಗಳನ್ನು ತಕ್ಷಣವೇ ಗುರುತಿಸಿ ತೆರವುಗೊಳಿಸುವುದು, ಅರಣ್ಯ ನಾಶ ತಡೆಯುವುದು ಹಾಗೂ ಅರಣ್ಯ ಭೂಮಿಯ ಸಂರಕ್ಷಣೆಗೆ ಶಾಶ್ವತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಸ್ಥಳೀಯ ಗ್ರಾಮಸ್ಥರನ್ನು ಅರಣ್ಯ ಸಂರಕ್ಷಣಾ ಕಾರ್ಯದಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಅರಣ್ಯ ಸಂಪತ್ತನ್ನು ಭವಿಷ್ಯದ ಪೀಳಿಗೆಗಾಗಿ ಉಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅರಣ್ಯ ಸಂರಕ್ಷಣೆ ಕೇವಲ ಇಲಾಖೆಯ ಜವಾಬ್ದಾರಿಯಲ್ಲ; ಸ್ಥಳೀಯ ಜನರು, ಜನಪ್ರತಿನಿಧಿಗಳು ಹಾಗೂ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಅರಣ್ಯ ಅತಿಕ್ರಮಣಕ್ಕೆ ಪರಿಣಾಮಕಾರಿ ಕಡಿವಾಣ ಹಾಕಲು ಸಾಧ್ಯ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










