ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿಕ್ಷಕರ ದಿನಾಚರಣೆ (Teacher’s Day) ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಬೆಂಗಳೂರಿನ ಸರ್ಕಾರಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಶಿಕ್ಷಕರೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಗಮನ ಸೆಳೆದರು.
ತಣಿಸಂದ್ರದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮೊದಲಿಗೆ ಭೇಟಿ ನೀಡಿದ ಸಚಿವರು, ಅಲ್ಲಿನ ಶಿಕ್ಷಕರೊಂದಿಗೆ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಶುಭಾಶಯ ಕೋರಿದರು. ಶಿಕ್ಷಣ ಇಲಾಖೆಯ ಸಚಿವರೊಬ್ಬರು ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಿದ್ದು ಇದೇ ಮೊದಲು ಎಂದು ತಿಳಿಸಲಾಯಿತು.
ಸಚಿವರು ಶಾಲೆಗೆ ಆಗಮಿಸಿ ಶಿಕ್ಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ವೀಣಾ ಸಂತಸ ವ್ಯಕ್ತಪಡಿಸಿದರು. “ಇದು ನಮಗೆ ಸಿಕ್ಕಿರುವ ಸುವರ್ಣಾವಕಾಶ. ಸಚಿವರು ನಮ್ಮ ಶಾಲೆಗೆ ಆಗಮಿಸಿ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿರುವುದು ನಿಜಕ್ಕೂ ಸಂತಸದ ಸಂಗತಿ. ಶಿಕ್ಷಣ ಸಚಿವರಿಂದ ಶಿಕ್ಷಕರಿಗೆ ಸಿಕ್ಕಿರುವ ದೊಡ್ಡ ಗೌರವ ಇದಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ 9ನೇ ತರಗತಿ ವಿದ್ಯಾರ್ಥಿನಿ ಸಾಭಮ್ಮ, “ಖಾಸಗಿ ಶಾಲೆಗಳಿಗಿಂತ ನಮ್ಮ ಸರ್ಕಾರಿ ಶಾಲೆ ಯಾವುದಕ್ಕೂ ಕಡಿಮೆಯಿಲ್ಲ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ. ನಮಗೆ ಯಾವುದೇ ಕೊರತೆಯಿಲ್ಲ” ಎಂದು ಹೆಮ್ಮೆಯಿಂದ ಹೇಳಿದರು.
ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, “ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿನ ಶಿಕ್ಷಕರು ಹೇಗೆ ಬೋಧನೆ ಮಾಡುತ್ತಿದ್ದಾರೆ ಎಂಬುದು ಇದರಿಂದಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸುವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ಶಿಕ್ಷಕರಿಗೆ ಹೇಳಿದರು.
“ಸರ್ಕಾರಿ ಶಾಲೆಗಳ ಬಗ್ಗೆ ಮಾಧ್ಯಮಗಳಲ್ಲಿ ಟೀಕೆ-ಟಿಪ್ಪಣಿಗಳು ಬರುತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ ಶಾಲೆಗಳ ಸಾಧನೆ ಮತ್ತು ಇಲ್ಲಿರುವ ಸೌಲಭ್ಯಗಳನ್ನು ರಾಜ್ಯದ ಜನರಿಗೆ ತೋರಿಸುವುದಿಲ್ಲ. ಈ ಶಾಲೆ ದೆಹಲಿಯಲ್ಲಿರುವ ಸರ್ಕಾರಿ ಶಾಲೆಗಳಿಗಿಂತಲೂ ಉತ್ತಮವಾಗಿದೆ” ಎಂದು ಸಚಿವರು ಅಭಿಪ್ರಾಯಪಟ್ಟರು.
“ನಮ್ಮ ಸರ್ಕಾರ ಯಾವತ್ತೂ ಶಿಕ್ಷಕರನ್ನು ಮರೆಯುವುದಿಲ್ಲ. ಮನುಷ್ಯನಾಗಿ ನನಗೆ ಜೀವನದಲ್ಲಿ ಸಾಧನೆ ಮಾಡಲು ದಾರಿ ತೋರಿಸಿದವರು ಶಿಕ್ಷಕರು. ಹೀಗೆ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿರುವ ನಿಮ್ಮನ್ನು ನೋಡುವುದೇ ನನ್ನ ಭಾಗ್ಯ” ಎಂದು ಸಚಿವರು ಭಾವುಕರಾಗಿ ಹೇಳಿದರು.
ಈ ವೇಳೆ ಶಿಕ್ಷಕರು ಹಲವು ವಿಚಾರಗಳನ್ನು ಸಚಿವರ ಗಮನಕ್ಕೆ ತಂದರು. ನಿವೃತ್ತರಾದ ಶಿಕ್ಷಕರು ಆಸಕ್ತಿಯಿಂದ ಮತ್ತೆ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಈ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
Also read>> ತಾಯಿಯಂತೆ ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ರಾಘವೇಶ್ವರ ಶ್ರೀ
Madhu Bangarappa : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ
ರಾಜ್ಯದಲ್ಲಿ ಸುಮಾರು 46 ಸಾವಿರ ಶಾಲೆಗಳಿದ್ದು, ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ರಾಜ್ಯದ ಮಾದರಿ ಶಾಲೆಗಳನ್ನಾಗಿ ರೂಪಿಸಲಾಗುವುದು. ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಬಿಸಿಯೂಟದಂತಹ ಮಹತ್ವದ ಯೋಜನೆಗಳನ್ನು ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಕೊಡುಗೆಯನ್ನೂ ಸಚಿವರು ಸ್ಮರಿಸಿದರು. ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಶಾಲೆಗೆ ಹಾಜರಾಗುವ ಮಕ್ಕಳಿಗೆ ದಿನಕ್ಕೆ ಒಂದು ರೂಪಾಯಿ ನೀಡುವ ಮೂಲಕ ಜಾರಿಗೆ ತಂದಿದ್ದ ‘ಅಕ್ಷಯ’ ಯೋಜನೆಯ ಮಾದರಿಯನ್ನು ಮುಂದಿನ ದಿನಗಳಲ್ಲಿ ಬಿಸಿಯೂಟ ಯೋಜನೆ ರೂಪಿಸಲು ಬಳಸಿಕೊಳ್ಳಲಾಯಿತು ಎಂದು ಸಚಿವರು ಹೇಳಿದರು.
13 ಸಾವಿರ ಶಿಕ್ಷಕರ ನೇಮಕ
“ಅಧಿಕಾರಕ್ಕೆ ಬಂದ ಕೂಡಲೇ ಹಿಂದಿನ ಸರ್ಕಾರದ ಅವ್ಯವಸ್ಥೆಯಿಂದಾಗಿ ನ್ಯಾಯಾಲಯದ ವಿಚಾರಣೆಯಲ್ಲಿ ತಡೆಹಿಡಿಯಲಾಗಿದ್ದ 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. 52 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರೇ ಇಲ್ಲ ಎಂಬ ಸ್ಥಿತಿಯನ್ನು ನಾನು ಒಪ್ಪುವುದಿಲ್ಲ” ಎಂದು ಸಚಿವರು ಹೇಳಿದರು.
“15 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ” ಎಂದು ತಿಳಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ಸ್, ಪಠ್ಯಪುಸ್ತಕ
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. 1ರಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳನ್ನು ನೀಡುವ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಸಾಧ್ಯವಾದರೆ ಇದೇ ವರ್ಷದಿಂದ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
“ಬೆಸ್ಟ್ ಗುರುಗಳು ಸಿಗುವುದು ಸರ್ಕಾರಿ ಶಾಲೆಗಳಲ್ಲಿ ಮಾತ್ರ. ಉಳಿದ ಶಿಕ್ಷಕರ ಬಗ್ಗೆಯೂ ನನಗೆ ಗೌರವವಿದೆ. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರು ನೀಡುತ್ತಿರುವ ಸೇವೆ ಅತ್ಯಂತ ಮಹತ್ವದ್ದಾಗಿದೆ” ಎಂದು ಮಧು ಬಂಗಾರಪ್ಪ ಹೇಳಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಸಚಿವರು ನೆರೆದಿದ್ದ ಎಲ್ಲ ಶಿಕ್ಷಕರಿಗೂ ಗುಲಾಬಿ ಹೂ ನೀಡಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಬಳಿಕ ಆರ್.ಕೆ. ಹೆಗ್ಗಡೆನಗರದಲ್ಲಿರುವ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಶಾಲೆ, ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸಚಿವರು ಭೇಟಿ ನೀಡಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








