ನವದೆಹಲಿ: ರಾಷ್ಟ್ರ ಕಂಡ ಧೀಮಂತ ಮಹಿಳಾ ನಾಯಕಿ, ಮಾಜಿ ಕೇಂದ್ರ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಇಂದು ವಿಧಿವಶರಾಗಿದ್ದಾರೆ.
ಇಂದು ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತತಕ್ಷಣವೇ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವರಾಜ್ ಇಹಲೋಕ ತ್ಯಜಿಸಿದ್ದಾರೆ.
ಅವರು ನಿಧನರಾಗುವ ಕೇವಲ ಮೂರು ಗಂಟೆಗೂ ಮುನ್ನ ಅಂದರೆ, ಸಂಜೆ 7.23ಕ್ಕೆ ಟ್ವೀಟ್ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದು ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದರು.
ದಶಕಗಳ ಕಾಲ ಬಿಜೆಪಿಯ ಪ್ರಮುಖ ಮಹಿಳಾ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಅವರಿಗೆ ಕಳೆದ ಒಂದು ವರ್ಷದಿಂದ ಅನಾರೋಗ್ಯ ಬಾಧಿಸುತ್ತಿತ್ತು. ಹೀಗಾಗಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಳೆದ ನವೆಂಬರ್’ನಲ್ಲೇ ಅವರು ಘೋಷಸಿದ್ದರು.

















