ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಒಂದು ಶಿಕ್ಷಣ ಸಂಸ್ಥೆ ಕೇವಲ ಪಠ್ಯಪುಸ್ತಕದ ಜ್ಞಾನ ಕಲಿಸುವ ಜೊತೆಯಲ್ಲಿ ತನ್ನ ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲ ಸಮಾಜದಲ್ಲೂ ಸಹ ಸಾಮಾಜಿಕ ಕಳಕಳಿ ಮೂಡಿಸುವುದೂ ಬಹುಮುಖ್ಯ. ಅಂತಹ ಒಂದು ಕಾರ್ಯವನ್ನು ಶಿವಮೊಗ್ಗದ Mifse ಇಂದು ಮಾಡಿದೆ.
ಪೊಲೀಸ್ ಇಲಾಖೆ ವತಿಯಿಂದ ನಡೆಯುತ್ತಿರುವ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫೈರ್ ಅಂಡ್ ಸೇಫ್ಟಿ ಇಂಜಿನೀಯರಿಂಗ್ ಕಾಲೇಜು ಸಹ ಕೈ ಜೋಡಿಸಿದ್ದು, ಇದರ ಭಾಗವಾಗಿ ಇಂದು ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಸಂಸ್ಥೆಯ ಕಚೇರಿ ಮುಂಭಾಗದಿಂದ ಆರಂಭವಾದ ಜಾಗೃತಿ ಜಾಥಾ ಶಿವಪ್ಪ ನಾಯಕ ವೃತ್ತದಲ್ಲಿ ಸಮಾವೇಶಗೊಂಡಿತು. ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡು ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಪಾಲನೆ ಕುರಿತು ತಿಳಿಸಿದರು.
ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸಂಚಾರ ನಿಯಮಗಳನ್ನು ಜಾರಿಗೊಳಿಸಿರುವುದು ಸವಾರರು ಹಾಗೂ ಸಾರ್ವಜನಿಕರ ಹಿತಕ್ಕಾಗಿಯೇ. ಇದರ ಉಲ್ಲಂಘನೆ ಕೇವಲ ಕಾನೂನನ್ನು ಉಲ್ಲಂಘಿಸುವುದು ಮಾತ್ರವಲ್ಲ, ಬದಲಾಗಿ ಸವಾರರ ಹಾಗೂ ಸಾರ್ವಜನಿಕರ ಅಪಾಯಕ್ಕೆ ಎಡೆ ಮಾಡಿಕೊಡುತ್ತದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರಿಂದ ಪ್ರತಿಯೊಬ್ಬರೂ ಸುರಕ್ಷಿತವಾಗಿ ಸಂಚರಿಸುವ ಜೊತೆಯಲ್ಲಿ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂಬ ಸಂದೇಶವನ್ನು ಸಾರ್ವಜನಿಕರಿಗೆ ತಿಳಿಸಿದರು.
ಜಾಥಾದಲ್ಲಿ ಕಾಲೇಜಿನ ಎಂ.ಎಸ್. ರಾವ್, ವಿವೇಕ್ ಅಡಿಗ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಂಜುನಾಥ ಪಾಟೀಲ್, ಕಾಲೇಜಿನ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Get in Touch With Us info@kalpa.news Whatsapp: 9481252093















