ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ಕೃಷಿ, ಕೈಗಾರಿಕೆ ಅಭಿವೃದ್ಧಿ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.
ವಿಧಾನ ಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 41 ಲಕ್ಷ ರೈತರ ಖಾತೆಗೆ 8.25 ಕೋಟಿ ರೂ. ಹಣ ವರ್ಗಾವಣೆ ಮಾಡಿದೆ ಎಂದರು.
ಇನ್ನು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಭಯೋತ್ಪಾದನಾ ಚಟುವಟಿಕೆಗಳನ್ನೂ ಸಹ ಗಂಭೀರವಾಗಿ ಪರಿಗಣಿಸಿದ್ದೇವೆ. ಹೀಗಾಗಿ, ಭಯೋತ್ಪಾದನಾ ವಿರೋಧ ಘಟಕವನ್ನು ಅಸ್ಥಿತ್ವಕ್ಕೆ ತರಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದರು.
ಕೈಗಾರಿಕಾ ಕ್ಷೇತ್ರದ ಅಭ್ಯುದಯ ಸರ್ಕಾರದ ಆದ್ಯತೆಯಾಗಿದ್ದು, 4,050 ಕೋಟಿ ರೂ. ವೆಚ್ಚದ 21 ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ ಎಂದರು.
ಇಂದಿನಿಂದ ಆರಂಭವಾಗಿರುವ ವಿಧಾನ ಮಂಡಲ ಅಧಿವೇಶನ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಲಿದೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರುಗಳು ರಾಜ್ಯಪಾಲರನ್ನು ವಿಧಾನಸೌಧಕ್ಕೆ ಬರಮಾಡಿಕೊಂಡರು.
Get in Touch With Us info@kalpa.news Whatsapp: 9481252093















