ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಕರೋನಾ ಬಾಧಿತ ದೇಶಗಳಿಂದ ಆಗಮಿಸುವವರು ಸ್ವಯಂ ಪ್ರೇರಿತರಾಗಿ ಮಾಹಿತಿಯನ್ನು ಒದಗಿಸಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಸಾರ್ವಜನಿಕರು ಸಹ ವಿದೇಶಗಳಿಂದ ಆಗಮಿಸಿರುವವರ ಬಗ್ಗೆ ಮಾಹಿತಿ ಇದ್ದರೆ ಆರೋಗ್ಯ ಇಲಾಖೆ ಅಧಿಕಾರಿಗಳ ದೂರವಾಣಿಗೆ ಕರೆ ಮಾಡಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕುಮಟ್ಟದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡಗಳನ್ನು ರಚಿಸಬೇಕು. ಈ ತಂಡಗಳು ಮಾಹಿತಿ ದೊರೆತಲ್ಲಿಗೆ ತೆರಳಿ ಆರೋಗ್ಯ ತಪಾಸಣೆ ಹಾಗೂ ಸೂಕ್ತ ನಿಗಾ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ದೂರವಾಣಿ ಸಂಖ್ಯೆ
ಕರೋನಾ ವೈರಸ್ ಕುರಿತಾದ ಯಾವುದೇ ಸಂಶಯ, ಮಾಹಿತಿಗಳನ್ನು ಟೋಲ್ ಫ್ರೀ ಸಂಖ್ಯೆ 104 ಕರೆ ಮಾಡಿ ನೀಡಬಹುದಾಗಿದೆ. ಅದೇ ರೀತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದೂರವಾಣಿ ಸಂಖ್ಯೆ 9448721741, ಶಿವಮೊಗ್ಗ ತಾಲೂಕು ಆರೋಗ್ಯಾಧಿಕಾರಿ 9448183379, ಭದ್ರಾವತಿ 9449448755, ತೀರ್ಥಹಳ್ಳಿ 9448681734, ಶಿಕಾರಿಪುರ 8277510530, ಸೊರಬ 9110824873, ಸಾಗರ 8722297749 ಮತ್ತು ಹೊಸನಗರ 9964462404 ಕರೆ ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ.
ಆರ್ಥಿಕ ಗುರಿ ಸಾಧಿಸಬೇಕು
ಎಲ್ಲಾ ಇಲಾಖೆಗಳು ಮಾರ್ಚ್ ಅಂತ್ಯದ ಒಳಗಾಗಿ ಈ ಹಣಕಾಸು ವರ್ಷದ ಆರ್ಥಿಕ ಗುರಿಯನ್ನು ಶೇಕಡಾ ನೂರರಷ್ಟು ಸಾಧಿಸಬೇಕು. ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಆರ್ಥಿಕ ಗುರಿಯನ್ನು ಸಾಧಿಸುವುದು ಆಯಾ ಇಲಾಖಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿ ಫಲಿತಾಂಶ
ಕಳೆದ ವರ್ಷ ಶಿವಮೊಗ್ಗ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 21ನೇ ಸ್ಥಾನದಲ್ಲಿತ್ತು. ಈ ವರ್ಷ ಟಾಪ್ 10ರ ಒಳಗಾಗಿ ಸ್ಥಾನ ಪಡೆಯಬೇಕು. ಜಿಲ್ಲೆಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ 289 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಇನ್ನುಳಿದ 529 ಶಾಲಾ ಕೊಠಡಿಗಳು ದುರಸ್ತಿಯಾಗುವ ತನಕ ಆ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು ಎಂದು ಅವರು ಹೇಳಿದರು.
ಕುಡಿಯುವ ನೀರು ಪೂರೈಕೆ
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಕುಡಿಯುವ ನೀರಿಗೆ ಮುಂದೆ ತೊಂದರೆಯಾಗಬಹುದು ಎಂದು ಗುರುತಿಸಲಾಗಿರುವ 321 ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಪ್ರಸ್ತುತ ಟ್ಯಾಂಕರ್ ಮೂಲಕ ಶಿವಮೊಗ್ಗ ನಗರದ 5ವಾರ್ಡ್ಗಳಲ್ಲಿ ನೀರು ಒದಗಿಸಲಾಗುತ್ತಿದ್ದು, ನಗರ ಪ್ರದೇಶದಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post