ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಾವೇ ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ದಿನ ಸಮೀಪದಲ್ಲಿದ್ದರೂ, ಯಾವುದೇ ಅಪಾಯಗಳಿಗೆ ಅಂಜದೆ, ತಮ್ಮ ಭವಿಷ್ಯದ ದಿನಗಳ ಬಗ್ಗೆ ಚಿಂತಿಸದೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದಿನದಿಂದ ದಿನಕ್ಕೆ ಹರಡುತ್ತಿರುವ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕಿ ರೂಪಾ ಅವರ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಇಂದು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಅರೆಕಾಲಿಕ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ರೂಪಾ ಅವರ ಗಾಜನೂರಿನ ನಿವಾಸಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವನಂಜಪ್ಪ ಅವರೊಂದಿಗೆ ಭೇಟಿ ನೀಡಿ ಶುಭಾಶಯ ಕೋರಿದರು.
ಇಂತಹ ಸಂದಿಗ್ಧ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದುದ್ದಾಗಿದೆ.
ಕೊರೋನಾ ಸೋಂಕನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಅವರಲ್ಲಿ ಇವರು ಮಾದರಿಯಾಗಿ ನಿಲ್ಲುತ್ತಾರೆ ಎಂದ ಅವರು, ರೂಪಾ ಅವರು ಮುಂದಿನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನ ಬಗ್ಗೆಯೂ ಕಾಳಜಿ ವಹಿಸಲೇಬೇಕಾದ ಅಗತ್ಯವಿದೆ ಎಂದರು.
ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆ ಈಗ ಕೆಂಪು ವಲಯವಾಗಿ ಗುರುತಿಸಿಕೊಳ್ಳುವಂತಾಗಿದೆ. ಆದರೂ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರ ಕೈಗೊಳ್ಳುವ ಮಹತ್ವದ ನಿರ್ಧಾರಗಳಲ್ಲಿ ಸಾರ್ವಜನಿಕರು ಸಹಕರಿಸುವ ಅಗತ್ಯವಿದೆ ಎಂದರು.
ಸಾರ್ವಜನಿಕರು ಸಾಧ್ಯವಾದಷ್ಟು ಮನೆಯೊಳಗೆ ಇರುವುದು ಒಳಿತು. ಅನಗತ್ಯ ಓಡಾಟವನ್ನು ತಪ್ಪಿಸಬೇಕು. ತಮ್ಮ ಕುಟುಂಬ, ಮಕ್ಕಳು ವಿಶೇಷವಾಗಿ ವಯಸ್ಕರಾದ ತಮ್ಮ ಪೋಷಕರನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ತಮ್ಮ ಕುಟುಂಬದ ರಕ್ಷಣೆಯ ಹೊಣೆಯನ್ನೂ ತಾವೇ ಹೊರಬೇಕಾದ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವನಂಜಪ್ಪ, ಮಹಾನಗರ ಪಾಲಿಕೆ ಸದಸ್ಯ ವಿಶ್ವಾಸ್, ಹರಿಕೃಷ್ಣ, ಮಧುಕರ್, ರಮೇಶ್, ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post