ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಸರ್ಕಾರ ಬೆಳೆವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 30ರ ವರೆಗೆ ವಿಸ್ತರಿಸಬೇಕು ತಾಲೂಕು ರೈತ ಸಂಘದ ಮುಖಂಡ ಉಮೇಶ್ ಪಾಟೀಲ್ ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಕೇವಲ ನಾಲ್ಕು ದಿನ ಅವಕಾಶ ನೀಡಿದೆ. ಈ ಪೈಕಿ ನಾಲ್ಕನೇ ಶನಿವಾರ ಮತ್ತು ಭಾನುವಾರ ರಜಾದಿನಗಳಾಗಿದೆ. ರೈತರು ಇದೀಗ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ದಾಖಲೆಗಳ ಕ್ರೂಢಿಕರಣಕ್ಕೆ ಅವಕಾಶವೂ ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ಬೆಳೆವಿಮೆಗೆ ಅರ್ಜಿ ಸಲ್ಲಿಸಲು ನೀಡಿದ ಅವಧಿಯನ್ನು ಜುಲೈ 30ರ ವಿಸ್ತರಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರೈತರ ಬೆಳೆವಿಮೆಯನ್ನು ಸರ್ಕಾರವೇ ಪಾವತಿಸಿಕೊಳ್ಳುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದ ಅವರು, ಕೊರೋನಾದಂತಹ ಸಮಯವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ, ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಲು ಮುಂದಾಗಿದೆ. ಇನ್ನು ಮೆಸ್ಕಾಂ ಇಲಾಖೆಯನ್ನು ಖಾಸಗಿಕರಣಗೊಳಿಸಲು ಮುಂದಾಗಿದೆ. ರಾಜ್ಯ ಸರ್ಕಾರ ತಕ್ಷವೇ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಉಪಾಧ್ಯಕ್ಷ ನಾಗರಾಜ್ ಬೆಣ್ಣಿಗೇರಿ, ಪ್ರಧಾನ ಕಾರ್ಯದರ್ಶಿ ಬಲೀಂದ್ರಪ್ಪ ಚಿಕ್ಕಾವಲಿ, ಸಂಚಾಲಕ ಶಿವಮೂರ್ತಿ ಬಾರಂಗಿ ಇದ್ದರು.
(ವರದಿ: ಮಧುರಾಮ್, ಸೊರಬ)
Get In Touch With Us info@kalpa.news Whatsapp: 9481252093















