ಹುಬ್ಬಳ್ಳಿಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಹುಬ್ಬಳ್ಳಿ, ಸೆ.2: ವಿವಿಧ ಬೇಡಿಕೆಗಳು ಈಡೇರಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾರಿಗ ಬಸ್, ಆಟೋ ಸಂಚಾರ, ಶಾಲಾ ಕಾಲೇಜುಗಳು, ಹೋಟೆಲ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಇನ್ನು ರಾಷ್ಟ್ರೀಕೃತ ಬ್ಯಾಂಕ್, ಎಲ್ ಐಸಿ ನೌಕರರು ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಬ್ಯಾಂಕ್ ವಹಿವಾಟು ಸ್ಥಗಿತಗೊಂಡಿತ್ತು.
ವಿವಿಧ ಕಾರ್ಮಿಕ ಸಂಘಟನೆಗಳು ಬೀದಿಗಳಿದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು.
ಚಿತ್ರಮಂದಿರ, ಪೆಟ್ರೋಲ್ ಬಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ರಸ್ತೆಗಿಳಿದ ಬಸ್ ಗಳನ್ನು ಒತ್ತಾಯ ಪೂರ್ವಕವಾಗಿ ಸಂಚಾರ ನಡೆಸಿದಂತೆ ಒತ್ತಾಯಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಇದರಿಂದ ಹಳೇ ಬಸ್ ನಿಲ್ದಾಣದಲ್ಲಿ ಮಾತಿನ ಚಕಮಕಿ ನಡೆಯಿತು.
ಆಟೋ ಚಾಲಕರಿಂದ ಹಣ ವಸೂಲಿ:
ಬಸ್ ಬಂದ್ ಹಿನ್ನೆಲೆಯಲ್ಲಿ ಕೆಲವು ಆಟೋ ಚಾಲಕರಿಂದ ಸುಲಿಗೆ ಮಾಡಲಾಯಿತು.
ಹುಬ್ಬಳ್ಳಿ- ಧಾರವಾಡ ಸೇರಿದಂತೆ ಸ್ಥಳೀಯ ಸಂಚಾರಕ್ಕೆ ಹೆಚ್ಚಿನ ಹಣ ವಸೂಲಿ ಮಾಡಿದ ಚಾಲಕರು ಪ್ರಯಾಣಿಕರಿಂದ ಹೆಚ್ಚಿನ ಬಾಡಿಗೆ ವಸೂಲಿ ಮಾಡಿ, ಮತ್ತೆ ತಮ್ಮ ಅಮಾನವೀಯತೆಯನ್ನು ಪ್ರದರ್ಶಿಸಿದರು.
ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೆ
ಬೆಳಗಾವಿ: ದೇಶವ್ಯಾಪಿ ಕಾರ್ಮಿಕ ಸಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಬೆಳಗಾವಿ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ. ಆದರೆ ಕಾರ್ಮಿಕ ಒಕ್ಕೂಟಗಳ ಮುಷ್ಕರಕ್ಕೆ ಕುಂದಾ ನಗರಿ ಬೆಳಗಾವಿಯಲ್ಲಿ ಹಲವು ಸಂಘಟನೆಗಳು ಸಾಂಕೇತಿ ಪ್ರತಿಭಟನೆ ನಡೆಸಿದವು.
ಇನ್ನು ಬೆಳಗ್ಗೆಯಿಂದಲೇ ಬಸ್ ಸಂಚಾರ, ಆಟೋ ಸಂಚಾರ, ಹೋಟೆಲ್ ಎಂದಿನಂತೆ ಕಾರ್ಯಾರಂಭ ಮಾಡಿವೆ. ಕಾರ್ಮಿಕರ ಮುಷ್ಕರವನ್ನು ಬೆಂಬಲಿಸಿ, ವಿವಿಧ ಕಾರ್ಮಿಕ ಸಂಘಟನೆಗಳ 11 ಗಂಟೆಗೆ ಬೃಹತ್ ರ್ಯಾಲಿ ನಡೆಸಲಾಯಿತು.
ಇದರಿಂದ ನಗರ ಸಂಚಾರ ಕೆಲಕಾಲ ಸ್ಥಗಿತಗೊಂಡಿತು. ಮುಷ್ಕರದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿತ್ತು.















