ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹುಬ್ಬಳ್ಳಿ: ನಗರದಲ್ಲಿ ಕ್ಯಾನ್ಸರ್ ಗೆ ಸೂಕ್ತ ಚಿಕಿತ್ಸೆ ನೀಡುವ ಆಸ್ಪತ್ರೆಯೊಂದನ್ನು ನಿರ್ಮಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸೇರಿದಂತೆ ಹೊಸ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಾಣಿಜ್ಯ ನಗರವಾಗಿದ್ದು, ಇದನ್ನು ಆರೋಗ್ಯ ನಗರವಾಗಿ ರೂಪಿಸಬೇಕಿದೆ. ಈ ಭಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಬೇಕಿದೆ. ಕಿದ್ವಾಯಿಯ ಸಹಭಾಗಿತ್ವದಲ್ಲಿ, ಅದೇ ಗುಣಮಟ್ಟದ ಹೊಸ ಆಸ್ಪತ್ರೆ ನಿರ್ಮಿಸಬೇಕಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದರು.
ಐರೋಪ್ಯ ದೇಶಗಳಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗಿದೆ. ನಮ್ಮ ದೇಶದಲ್ಲೂ ಕೋವಿಡ್ ಎರಡನೇ ಅಲೆ ಬರುತ್ತಿದೆ ಎಂಬ ಸುದ್ದಿ ಬಂದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಆದರೆ ಕೊರೊನಾ ಇನ್ನೂ ಹೋಗಿಲ್ಲ. ಹುಬ್ಬಳ್ಳಿಯಲ್ಲಿ ಶೇ.90 ರಷ್ಟು ಜನರು ಮಾಸ್ಕ್ ಧರಿಸಿದ್ದು, ಬಹುತೇಕರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಇಡೀ ರಾಜ್ಯದ ಜನರು ಈ ನಿಯಮಗಳನ್ನು ಪಾಲಿಸಬೇಕು ಎಂದರು.
ಕೋವಿಡ್ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ನಿರಾಕರಿಸಿದ ಉದಾಹರಣೆ ಇದೆ. ಆದರೆ ಸರ್ಕಾರಿ ವೈದ್ಯರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕಿಮ್ಸ್ ನಲ್ಲಿ ಗರ್ಭಿಣಿಯರಿಗೆ ಯಶಸ್ವಿಯಾಗಿ ಹಾಗೂ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ 1 ಕೋಟಿ ಕೋವಿಡ್ ಪರೀಕ್ಷೆಗಳು ನಡೆದಿದ್ದು, ಕೋವಿಡ್ ರೋಗಿಗಳ ಚಿಕಿತ್ಸೆಗೆ 300 ಕೋಟಿ ರೂ.ಗೂ ಅಧಿಕ ಖರ್ಚು ಮಾಡಲಾಗಿದೆ ಎಂದರು.
ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















