ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಅರ್ಚಕರು ತಾವು ನಡೆಸಿಕೊಂಡು ಬರುತ್ತಿರುವ ಧಾರ್ಮಿಕ ಕಾರ್ಯಗಳನ್ನು ಮುಂದಿನ ದಿನಗಳಲ್ಲೂ ಇನ್ನೂ ಹೆಚ್ಚಿನ ರೀತಿಯಲ್ಲಿ ನಡೆಸುವ ಮೂಲಕ ಸಮಾಜದ ಕಲ್ಯಾಣಕ್ಕಾಗಿ ತಮ್ಮದೇ ಆದ ಸೇವೆಯನ್ನು ಸಲ್ಲಿಸಬೇಕೆಂದು ಧರ್ಮ ಜಾಗರಣ ಅರ್ಚಕರ ಮಹಾಸಭಾ ಗೌರವಾಧ್ಯಕ್ಷ ವೇದಬ್ರಹ್ಮ ಎನ್.ಎಸ್ ಕೃಷ್ಣಮೂರ್ತಿ ಸೋಮಯಾಜಿ ಕರೆ ನೀಡಿದರು.
ಅವರು ಭಾನುವಾರ ಜನ್ನಾಪುರ ಮಹಾಗಣಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 18 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿಯೇ ವಿಶೇಷವಾಗಿ ಅರ್ಚಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮಹಾಸಭಾ ವತಿಯಿಂದ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸುವ ಜೊತೆಗೆ ಅರ್ಚಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದರು.
ಗಾಂಧಿನಗರ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಅರ್ಚಕ ಮುರುಳಿಧರ ಶರ್ಮ, ಹಿರಿಯೂರು ಶ್ರೀ ರಂಗನಾಥ, ಶ್ರೀ ಆಂಜನೇಯ ದೇವಸ್ಥಾನದ ಅರ್ಚಕ ಎಚ್.ಎಸ್ ಸಂಪತ್ ಅಯ್ಯಂಗಾರ್, ಸುಣ್ಣದಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕ ನಾರಾಯಣ ಭಟ್ಟ, ಮಾಳೇನಹಳ್ಳಿ ಶ್ರೀ ಭೈರವೇಶ್ವರ ದೇವಸ್ಥಾನದ ಅರ್ಚಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು. ಅರ್ಚಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಮಹಾಸಭಾ ಅಧ್ಯಕ್ಷ ಎಸ್.ವಿ ರಾಮಾನುಜ ಅಯ್ಯಂಗಾರ್ ಅಧ್ಯಕ್ಷತೆ ವಹಿಸಿದ್ದರು. ಭದ್ರಾ ನರ್ಸಿಂಗ್ ಹೋಂ ವೈದ್ಯ ಡಾ. ನರೇಂದ್ರಭಟ್, ಉಪಾಧ್ಯಕ್ಷ ಕೆ.ಎನ್ ಲಕ್ಷ್ಮೀಕಾಂತಯ್ಯ, ಪ್ರಧಾನ ಕಾರ್ಯದರ್ಶಿ ಜೆ.ಪಿ ಗಣೇಶ್ ಪ್ರಸಾದ್, ಸಹಕಾರ್ಯದರ್ಶಿ ಡಿ. ಸಂಜೀವ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















