ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಯಲ್ಲಿ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಎನ್ಎಸ್ಎಸ್ ಅಧಿಕಾರಿಗಳಿಗೆ ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಗಿಡಕ್ಕೆ ನೀರು ಹಾಕುವ ಮೂಲಕ ರಾಜ್ಯ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಜೋಗಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಎನ್ಎಸ್ಎಸ್ ಪರಿಣಾಮಕಾರಿಯಾಗಿ ನಡೆಯುತ್ತಿದೆ. ಇದು ಅವಶ್ಯಕ ಕೂಡ. ಹದಿಹರೆಯದ ವಯಸ್ಸಿನಲ್ಲಿ ಸೇವಾ ಮನೋಭಾವನೆ ಮತ್ತು ವ್ಯಕ್ತಿತ್ವ ವಿಕಸನ ಅತ್ಯಂತ ಅನಿವಾರ್ಯ. ಮಕ್ಕಳಿಗೆ ಪ್ರೌಢಾವಸ್ಥೆಯಲ್ಲಿಯೇ ಸಾಮಾಜಿಕ ಅರಿವು ಮೂಡಿಸುವುದು ಇಂದಿನ ಪೀಳಿಗೆಗೆ ಅವಶ್ಯಕವಾಗಿದೆ ಎಂದು ತಿಳಿಸಿದರು.

ನಂತರದ ತಮ್ಮ ಉಪನ್ಯಾಸ ಗೋಷ್ಠಿಯಲ್ಲಿ ಪ್ರೌಡಶಾಲೆಗಳಲ್ಲಿ ಎನ್ಎಸ್ಎಸ್ ಪರಿಣಾಮಕಾರಿ ಅನುಷ್ಠಾನ ಕುರಿತು ಉತ್ತಮ ತರಬೇತಿ ನೀಡಿದರು.
ಪರೋಕ್ಷವಾಗಿ ಭಾಗವಹಿಸಿದ್ದ ರಾಜ್ಯ ರಾಸೇಯೋ ಕೋಶದ ರಾಜ್ಯ ಎನ್ಎಸ್ಎಸ್ ಅಧಿಕಾರಿಗಳು ಡಾ. ಗಣನಾಥ ಶೆಟ್ಟಿ ಎಕ್ಕಾರು ಮೊಬೈಲ್ ಮೂಲಕ ಸಂಪರ್ಕಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ರಾಜ್ಯ ಎನ್ಎಸ್ಎಸ್ ಕೋಶದ ಪರವಾಗಿ ಕುವೆಂಪು ವಿಶ್ವವಿದ್ಯಾಲಯದ ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಹೈಸ್ಕೂಲ್ ಮಟ್ಟದಲ್ಲಿ ಎನ್ಎಸ್ಎಸ್ ಅನುಷ್ಠಾನ ಕುರಿತು ಹರ್ಷ ವ್ಯಕ್ತಪಡಿಸಿದರು.

ಕುವೆಂಪು ವಿವಿ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಣ್ಣುಡಿಯಂತೆ ಪ್ರೌಢಶಾಲೆಯಲ್ಲಿಯೇ ಮಕ್ಕಳಲ್ಲಿ ಪರಿಸರ ಸಂರಕ್ಷಣೆ, ಸಾಮಾಜಿಕ ಜವಬ್ದಾರಿ, ಹಿರಿಯರಿಗೆ ಗೌರವ ವಿಚಾರಗಳ ಕುರಿತು ಅರಿವು ಮೂಡಿಸುವುದು ಅತ್ಯಂತ ಸೂಕ್ತ ಎಂದು ತಿಳಿಸಿದರು.
ವೆಂಕಟೇಶ್ ಹಾಗೂ ಪಿ. ಲಕ್ಷ್ಮಣ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಾಗಾರದಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ೮೦ ಪ್ರೌಢಶಾಲೆಗಳ ಕಾರ್ಯಕ್ರಮಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು. ಪ್ರತಿಭಾ ನೋಲೋಗಲ್ ಪ್ರಾರ್ಥಿಸಿ, ರಾಚಪ್ಪ ವಂದಿಸಿ, ಮಾಲಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















