ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಾಮಾರಿ ಸಂಭವಿಸಿದ ಘಟನೆ ಇಂದು ನಡೆದಿದೆ.
ಕನಕ ಮಂಟಪ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, 8 ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು.
ಸ್ನೇಹ ಜೀವಿ ಉಮೇಶ್ ಅವರ ತಂಡ ಮಲ್ನಾಡ್ ವಾರಿಯರ್ಸ್ ಹಾಗೂ ಧರ್ಮಪ್ರಸಾದ್ ರವರ ಸ್ಟೀಲ್ ಟೈಂ ತಂಡಗಳ ನಡುವೆ ಫೈನಲ್ ಪಂದ್ಯಾವಳಿ ನಡೆಯುತ್ತಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಮಲ್ನಾಡ್ ವಾರಿಯರ್ಸ್ ಜಯಭೇರಿ ಬಾರಿಸಿದ್ದು, ಸ್ಟೀಲ್ ಟೈಂ ತಂಡ ರನ್ಬರ್ ಅಪ್ ಆಗಿದೆ.
ಈ ವೇಳೆ ಧರ್ಮಪ್ರಸಾದ್ ಅವರ ತಂಡದ ಹುಡುಗನೋರ್ವ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದಕ್ಕೆ ಕಾಂಗ್ರೆಸ್’ನ ಕೆಲವು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ವಾಗ್ವಾದ ನಡೆದು ಎರಡೂ ಕಡೆಯವರ ನಡುವೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಕಡೆಯವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಬಿಜೆಪಿ ಮುಖಂಡ ಧರ್ಮಪ್ರಸಾದ್ ಅವರ ಮೇಲೂ ಸಹ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಧರ್ಮಪ್ರಸಾದ್, ನಕುಲ್, ಬಜರಂಗದಳದ ಸುನಿಲ್ ಕುಮಾರ್ ಸೇರಿದಂತೆ 5-6 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು, ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಆಸ್ಪತ್ರೆಯಲ್ಲಿಯೂ ಪರ ವಿರೋಧ ಘೋಷಣೆಗಳನ್ನು ಕೂಗಲಾಗಿದ್ದು, ಇಲ್ಲೂ ಸಹ ವಾಗ್ವಾದಗಳು ನಡೆದಿವೆ ಎಂದು ವರದಿಯಾಗಿದೆ. ಅಲ್ಲದೇ ಬಿಜೆಪಿ ಮುಖಂಡರುಗಳಾದ ಮಂಗೋಟೆ ರುದ್ರೇಶ್ ಹಾಗೂ ಪ್ರಭಾಕರ್ ಅವರುಗಳ ಮೇಲೆಯೂ ಸಹ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿಯೂ ಸಹ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post