ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸರ್ಕಾರಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳನ್ನು ಆಧುನೀಕರಣಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಾಲೂಕು ಕಛೇರಿ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.

ರಾಜ್ಯಾದ್ಯಂತ ಸುಮಾರು 50 ವರ್ಷಗಳಿಗೂ ಹಳೇಯದಾದ ಸುಮಾರು 14 ಸಾವಿರ ಶಾಲೆಗಳಿದ್ದು, ಈ ಶಾಲೆಗಳನ್ನು ಪುನರ್ ನಿರ್ಮಾಣ ಮಾಡುವುದು. 22 ಸಾವಿರ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ತಕ್ಷಣ ಸೌಕರ್ಯಗಳನ್ನು ಕಲ್ಪಿಸಿಕೊಡುವುದು. 8 ಸಾವಿರ ಶಾಲೆಗಳು ಮುಚ್ಚುವ ಹಂತದಲ್ಲಿದ್ದು, ಈ ಶಾಲೆಗಳನ್ನು ನವೀಕರಣಗೊಳಿಸಿ ಹಾಳಾಗದಂತೆ ನಿರ್ವಹಣೆ ಮಾಡುವಂತೆ ಒತ್ತಾಯಿಸಿದರು.

ಪ್ರಾಥಮಿಕ ಹಂತದಿಂದಲೇ ಮಾತೃಭಾಷೆ ಜೊತೆಗೆ ಆಂಗ್ಲಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು. ಎಲ್ಲಾ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಟಿವಿ ವಿತರಿಸುವುದು ಹಾಗೂ ಅವಶ್ಯಕತೆ ಇರುವ ಕಲಿಕಾ ಮಾಧ್ಯಮದ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರುವ ಶಿಕ್ಷಕರನ್ನು ನೇಮಿಸಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
ಫಲಕಗಳನ್ನು ಹಿಡಿದು ಏಕಾಂಗಿ ಹೋರಾಟ ನಡೆಸಿದ ಶಶಿಕುಮಾರ್ ಎಸ್ ಗೌಡ ಕೊನೆಯಲ್ಲಿ ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















