ಕಲ್ಪ ಮೀಡಿಯಾ ಹೌಸ್
ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರುಳ ಸಿದ್ದಪ್ಪ ಹೇಳಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇಂದು ಹಮ್ಮಿಕೊಂಡ ಅಪರಾಧಗಳು ಮತ್ತು ಸಂಚಾರಿ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಮಾದಕ ವಸ್ತುಗಳ ವ್ಯಸನಿಗಳಾದರೆ ಭವಿಷ್ಯವನ್ನು ಸಂಪೂರ್ಣ ನಾಶ ಮಾಡಿಕೊಳ್ಳುತ್ತೀರಿ ಎಂದು ಎಚ್ಚರಿಕೆ ನೀಡಿದ ಅವರು, ಶಾಲಾ-ಕಾಲೇಜು ಅವರಣದಲ್ಲಿ ರ್ಯಾಗಿಂಗ್, ಮಾದಕ ವಸ್ತುಗಳ ಮಾರಾಟ ಸೇರಿದಂತೆ ಅಪರಾಧ ಕೃತ್ಯಗಳು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ಮಾತನಾಡಿ, ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. 18 ವರ್ಷ ತುಂಬಿದ ಯುವಜನತೆ ಕಡ್ಡಾಯವಾಗಿ ಚಾಲನ ಪರವಾನಗಿ ಮಾಡಿಸಿಕೊಂಡು ವಾಹನ ಚಲಾಯಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು, ಕೋವಿಡ್ ಸೋಂಕು ತಡೆಗೆ ಸಾರ್ವಜನಿಕವಾಗಿ ಸಂಚಾರಿಸುವಾಗ ಮಾಸ್ಕ್ ಧರಿಸುವುದು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅರಿವು ಮೂಡಿಸಿದರು.
ತುರ್ತು ಸಂದರ್ಭಗಳಲ್ಲಿ ರಕ್ಷಣೆಗಾಗಿ ಪೊಲೀಸರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದರು.
ಎಎಸ್ಐ ಚಿನ್ನಪ್ಪ, ಸಿಬ್ಬಂದಿ ಜಗದೀಶ ಬೇಲೂರಪ್ಪನವರ್, ಬಂಗಾರಪ್ಪ ಸೇರಿದಂತೆ ಮತ್ತಿತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post