ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಪ್ರಸ್ತುತ ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲೂ ಕಲ್ಮಶ ತುಂಬಿಕೊಂಡಿದ್ದು, ಇವುಗಳಿಂದ ಪರಿಶುದ್ಧರಾಗಲು ವಚನಗಳು ಸಹಕಾರಿಯಾಗಿವೆ ಎಂದು ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಅಭಿಪ್ರಾಯಪಟ್ಟರು.
ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು 6ನೇ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಚನಗಳು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು, ಬಸವಾದಿ ಶರಣರ ಚಾರಿತ್ರಿಕ ಪಾತ್ರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬರಲ್ಲೂ ಕಾಯಕ, ದಾಸೋಹದ ಪರಿಕಲ್ಪನೆ ಮೂಡಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ಸಾಧ್ಯ ಎಂದು ಆಶಯ ವ್ಯಕ್ತಪಡಿಸಿದರು.
ಜಗಜ್ಯೋತಿ ಬಸವಣ್ಣನವರ ಆಶಯದಂತೆ ನಮ್ಮ ನಡೆ-ನುಡಿ ಒಂದೇ ದಿಕ್ಕಿನಲ್ಲಿ ಸಾಗಬೇಕು. ಸಮಾನತೆ ಪರಿಕಲ್ಪನೆಯೊಂದಿಗೆ ಪರಿಶುದ್ಧ ಮನಸ್ಸು ಮತ್ತು ಆಲೋಚನೆಗಳನ್ನು ಹೊಂದುವ ಮೂಲಕ ಬದುಕು ರೂಪಿಸಿಕೊಳ್ಳುವುದರಿಂದ ನಮ್ಮ ದೇಹದ ಆರೋಗ್ಯ ವೃದ್ಧಿಸುವ ಜೊತೆಗೆ ಕೊರೋನಾದಂತಹ ಮಹಾಮಾರಿಯನ್ನೂ ಸಹ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಹೊಂದಬಹುದು. ಈ ನಿಟ್ಟಿನಲ್ಲಿ ಅಂತರಂಗ-ಬಹಿರಂಗದ ಶುದ್ದಿ ವೈದ್ಯಲೋಕಕ್ಕೂ ಕೂಡ ಸವಾಲಾಗಿ ಪರಿಣಮಿಸುತ್ತದೆ ಎಂದು ಹೇಳಿದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಶರಣರ ಜೀವನ ಜಾತಿ, ಧರ್ಮ ಮತ್ತು ಬೇಧಭಾವಗಳನ್ನು ಮೀರಿದ ಸರ್ವಸಮಾನತೆಯ ಬದುಕಾಗಿದೆ. ಇದು ಕೇವಲ 12ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ ಇಂದಿಗೂ ಪ್ರಸ್ತುತವಾರುವುದು ಶ್ಲಾಘನೀಯ. ಶರಣರ ಆಶಯದಂತೆ ನಮ್ಮ ಬದುಕು ರೂಪುಗೊಳ್ಳಬೇಕು ಎಂದು ಆಶಿಸಿದರು.
ಪ್ರಸ್ತುತ ಕ್ಷೇತ್ರದಲ್ಲಿ ಕೆಲವರು ಜಾತಿ, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತಿ, ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಯತ್ನಿಸಲಾಗುತ್ತಿದೆ. ರಾಜಕಾರಣದಲ್ಲಿ ಟೀಕೆ ಟಿಪ್ಪಣಿಗಳು ಸಾಮಾನ್ಯ. ಮುಂದಿನ ದಿನಗಳಲ್ಲಿ ಕ್ಷೇತ್ರದ ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಇತ್ತೀಚೆಗೆ ಕ್ಷೇತ್ರದಲ್ಲಿ ಉಂಟಾಗಿರುವ ಅಹಿತಕರ ಬೆಳವಣಿಗೆಗಳ ಕುರಿತು ಶಾಸಕರು ಮಾರ್ಮಿಕವಾಗಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post