ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಸೋಂಕು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದು ಪ್ರತಿಯಿಬ್ಬರೂ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸುವಂತಾಗಿದೆ ಎಂದು ಪೌರಾಯುಕ್ತ ಮನೋಹರ್ ತಿಳಿಸಿದರು.
ಜನ್ನಾಪುರ ಬಬ್ಬೂರುಕಮ್ಮೆ ಸಮುದಾಯ ಭವನದಲ್ಲಿ ಹ್ಯಾಪಿ ಲೀವಿಂಗ್ ಲೈಫ್ ಯೋಗ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗಪಟುಗಳಿಗೆ ಪ್ರಶಸ್ತಿ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನದ ಜಂಜಾಟದ ಬದುಕಿನ ನಡುವೆ ಪ್ರಸ್ತುತ ಕೊರೋನಾ ಮನುಷ್ಯನ ಆರೋಗ್ಯಕ್ಕೆ ಸವಾಲಾಗಿ ಪರಿಣಮಿಸಿದೆ. ತಮ್ಮ ಆರೋಗ್ಯದ ರಕ್ಷಣೆಗಾಗಿ ಎಲ್ಲಾ ರೀತಿಯ ಪ್ರಯತ್ನಗಳಿಗೆ ನಾವುಗಳು ಮುಂದಾಗಿದ್ದೇವೆ. ಇಂತಹ ಸಂದರ್ಭದಲ್ಲಿ ಯೋಗ ಸಹ ನಮ್ಮ ಆರೋಗ್ಯ ರಕ್ಷಣೆಗೆ ಪೂರಕವಾಗಿದ್ದು, ಯೋಗ ಕಲಿಕೆ ಮೂಲಕ ಆರೋಗ್ಯವಂತರಾಗಲು ಕರೆ ನೀಡಿದರು.
ಯೋಗ ಗುರು ಮಹೇಶ್ ಮಾತನಾಡಿ, ಪ್ರಶಸ್ತಿಗೆ ಮಾತ್ರ ಯೋಗ ಸೀಮಿತವಾದೆ, ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿರ್ವಹಿಸಲು ಸಹಕಾರಿಯಾಗಿದ್ದು, ಎಲ್ಲಾ ರೀತಿಯ ಕಾಯಿಲೆಗಳಿಗೂ ಸಹ ಪರಿಹಾರ ಕಂಡುಕೊಳ್ಳಲು ಯೋಗದಿಂದ ಸಾಧ್ಯ. ಉತ್ತಮ ಮನಸ್ಸು, ದೇಹದಿಂದ ಉತ್ತಮ ಆರೋಗ್ಯ ಸಹ ಸಾಧ್ಯ. ಆದ್ದರಿಂದ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ಯೋಗದಲ್ಲಿ ತೊಡಗಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಬೆಂಗಳೂರಿನ ಶಿವಜ್ಯೋತಿ ಯೋಗ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಯೋಗೋತ್ಸವ-2021 ಸ್ಪರ್ಧೆಯಲ್ಲಿ ಯೋಗ ಕೇಂದ್ರದ 12 ಮಂದಿ ಭಾಗವಹಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದು, ಪ್ರಶಸ್ತಿಗಳನ್ನು ಸ್ವೀಕರಿಸಿದ ಯೋಗಪಟುಗಳು ಇದೇ ಸಂದರ್ಭದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸ್ಥಳೀಯ ಮುಖಂಡ ಕೆ. ಮಂಜುನಾಥ್, ಶೃತಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















