ಕಲ್ಪ ಮೀಡಿಯಾ ಹೌಸ್
ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಪಟ್ಟಣದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದಲ್ಲಿ ಭಾನುವಾರ ಆರಂಭಗೊಂಡ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ತಾಲ್ಲೂಕು ಆಡಳಿತದಿಂದ ಕೈಗೊಳ್ಳುವ ನಿರ್ಧಾರಗಳಿಗೆ ಜನತೆ ಸಹಕಾರ ನೀಡಬೇಕು. ಈ ಹಿಂದೆ ಕೋರೋನಾ ಸೋಂಕಿತರ ಆರೈಕೆಗೆ ಶಿಕಾರಿಪುರ ಮತ್ತು ಶಿವಮೊಗ್ಗ ತೆರಳುವ ಸನ್ನಿವೇಷವಿತ್ತು. ಇದೀಗ ಪಟ್ಟಣದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ 26 ಹಾಸಿಗೆಗಳ ಡಿಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಆರಂಭಿಸಲಾಗಿದೆ. ಆನವಟ್ಟಿಯಲ್ಲೂ ಸಹ 21 ಹಾಸಿಗೆಗಳ ಡಿಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ ಶೀಘ್ರದಲ್ಲಿ ಆರಂಭವಾಗಲಿದೆ. ಸೋಂಕಿತರು ಧೃತಿಗೆಡುವ ಅವಶ್ಯಕವಿಲ್ಲ. ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಎದುರಿಸಬೇಕು ಎಂದರು.
ಡಿಸಿಎಚ್ ಸೆಂಟರ್ನಲ್ಲಿ ಕೋರೋನಾ ಸೋಂಕಿತರಿಗೆ ಅತ್ಯಗತ್ಯವಿರುವ ಆಮ್ಲಜನಕ ವ್ಯವಸ್ಥೆ, ಬಿಸಿ ನೀರು, ಉತ್ತಮ ಆಹಾರದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಜನರು ನಿರ್ಲಕ್ಷ್ಯ ವಹಿಸದೇ ಮುಂಜಾಗ್ರತೆ ವಹಿಸಬೇಕಿದ್ದು, ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಸೋಂಕಿನ ವಿರುದ್ಧ ಹೋರಾಡಬೇಕು ಎಂದರು.
ತಹಶೀಲ್ದಾರ್ ಶಿವಾನಂದಪಿ. ರಾಣೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಕ್ಷತಾ ವಿ. ಖಾನಾಪುರ, ತಾಪಂ ಪ್ರಭಾರ ಇಒ ಕೆ.ಜೆ. ಕುಮಾರ್, ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಕೆ.ಎಚ್. ಸದಾಶಿವ, ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗಾರ್, ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ವೇತಾ, ಪುರಸಭೆ ಅಧ್ಯಕ್ಣ ಎಂ.ಡಿ. ಉಮೇಶ್, ಪ್ರಭಾರ ಮುಖ್ಯಾಧಿಕಾರಿ ಶೆಲ್ಜಾ ನಾಯ್ಕ್, ಸೇರಿದಂತೆ ಮತ್ತಿತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















