ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಬಂದಿರುವ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಭದ್ರಾ ಮೇಲ್ದಂಡೆ ಯೋಜನೆಯ ಕ್ರಸ್ಟ್ ಗ್ರೇಟ್ ಗೆ ಭೇಟಿನೀಡಿ ಸ್ಥಳ ಪರಿಶೀಲಿಸಿದ ಅವರು 2016-18 ನೇ ಸಾಲಿನಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. 2018ರಲ್ಲಿ ಡ್ಯಾಮ್ನಿಂದ ನೀರು ಹೊರಬಿಟ್ಟಾಗ ಕಾಮಗಾರಿ ಮತ್ತೆ ದುರಸ್ತಿ ಹಂತ ತಲುಪಿತು.

ಈ ಕುರಿತು ಸ್ಥಳೀಯರು ಮತ್ತು ರೈತ ಸಂಘಟನೆಗಳು 2016ರ ಕಾಮಗಾರಿ ಕಳಪೆಯದಾಗಿದ್ದು, ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಮೂವರು ನಿವೃತ್ತ ಇಂಜಿನಿಯರುಗಳ ಸಮಿತಿ ರಚಿಸಲಾಗಿದ್ದು, ಅವರು ಪರಿಶೀಲಿಸಿ ಕಾಮಗಾರಿ ಕಳಪೆಯದಾಗಿತ್ತೋ ಅಥವಾ ಇದೊಂದು ನೈಸರ್ಗಿಕ ಅವಘಡವೋ ಎಂದು ವರದಿ ನೀಡಲಿದ್ದಾರೆ. ಅನಂತರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ,ಬಿ ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ರೈತ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















